ಉಡುಪಿ: ಕನ್ನಡ ಹಾಗೂ ತುಳು ಭಾಷೆ, ಸಾಹಿತ್ಯ, ಜಾನಪದ, ಸಂಶೋಧನ ಕ್ಷೇತ್ರಗಳ ವಿದ್ವಾಂಸ ಡಾ. ಶಿವರಾಮ ಶೆಟ್ಟಿ 2026ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ (ಜಂಟಿ ಹೆಸರಲ್ಲಿ) ನೀಡಲಾಗುವ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂ. 20ರಂದು ನಡೆಯಲಿದ್ದು, ಪ್ರಶಸ್ತಿಯು 20 ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ದ.ಕ. ಜಿಲ್ಲೆಯ ಬೋಳಾರದವಾದ ಡಾ. ಬಿ. ಶಿವರಾಮ ಶೆಟ್ಟಿ ಅವರು ಮೈಸೂರು ವಿವಿಯಿಂದ ಸ್ನಾತಕೋತ್ತರ ಪದವಿ ಹಾಗೂ ಮಂಗಳೂರು ವಿವಿಯಿಂದ ‘ತುಳುನಾಡಿನ ಸಸ್ಯಜಾನಪದ’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಮಂಗಳೂರು ವಿವಿಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿ, ಉಪನ್ಯಾಸಕರಾಗಿ, ಪ್ರಾಧ್ಯಾಪಕ ಹಾಗೂ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 10ಕ್ಕೂ ಹೆಚ್ಚು ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಕನ್ನಡ ಮತ್ತು ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ 130 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರ ಸಂಪಾದಕತ್ವದಲ್ಲಿ ಸುಮಾರು 50ಕ್ಕೂ ಅಧಿಕ ಸಂಶೋಧನಾ ಲೇಖನಗಳು ಹಾಗೂ 19 ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ.
ಮಂಗಳೂರು ವಿ.ವಿ ಕನಕದಾಸ ಅಧ್ಯಯನ ಪೀಠ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾಗಿ, ಯು.ಜಿ.ಸಿ ಸ್ಯಾಪ್ ಯೋಜನೆಯ ಸಂಯೋಜಕರಾಗಿ, ಗ್ಯಾನ್ ಯೋಜನೆಯ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ.ಅವರು ಕರ್ನಾಟಕ ಸರ್ಕಾರದ ‘ಕನಕ ಗೌರವ’, ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಹಾಗೂ ಕರ್ನಾಟಕ ಸರಕಾರದ ‘ಕನಕಶ್ರೀ’ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.