ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ ಮೈಸೂರಿನ ಶೇಷಾದ್ರಿಪುರಂ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಕಾರ್ಯದರ್ಶಿ ನಾಡೋಜ ಡಾ.ವೂಡೆ ಪಿ.ಕೃಷ್ಣ ಉದ್ಘಾಟಿಸಿದರು.

ನಂತರ ನಾಡೋಜ ಡಾ.ವೂಡೆ ಪಿ.ಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಪರಿಸ್ಥಿತಿಗೆ ಹೊಂದಾಣಿಕೆಯಾಗಿ ಸಹಕಾರ ನೀಡುವುದೆ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಮುಖ್ಯ ಉದ್ದೇಶ ಎಂದರು.

ನಗರ ಪ್ರದೇಶದ ಶಿಬಿರಾರ್ಥಿಗಳು ಗ್ರಾಮೀಣ ಪ್ರದೇಶದ ವಾತಾವರಣಕ್ಕೆ ಹೊಂದಿಕೊಳ್ಳುವ, ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವ, ಗ್ರಾಮೀಣ ಪ್ರದೇಶದ ಸಂಪ್ರದಾಯ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಶಿಬಿರದ ಉದ್ದೇಶಗಳನ್ನು ಸಾರ್ಥಕ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಬಳಿಕ ಗಾಂಧಿವಾದಿ ಡಾ.ಸುಜಯ್ ಕುಮಾರ್ ಮಾತನಾಡಿ, ಶಿಬಿರಾರ್ಥಿಗಳು ಗ್ರಾಮೀಣ ಜನರ ಆರೋಗ್ಯ, ಸಾರಿಗೆ ನಿಯಮಗಳು, ಕಾನೂನು ಅರಿವು, ಸ್ವಚ್ಛತೆ, ಶ್ರಮಾದಾನ, ರಕ್ತದಾನ, ಆರೋಗ್ಯ ತಪಾಸಣೆ ಸೇರಿದಂತೆ ಇತರ ಸಾಮಾಜಿಕ ಕೆಲಸಗಳನ್ನು ನಿರ್ವಹಿಸುವಂತಾಗಲಿ. ಜೊತೆಗೆ ಶಿಬಿರಾರ್ಥಿಗಳ ಸೇವೆಯನ್ನು ಗ್ರಾಮಗಳು ಸ್ಮರಿಸಿಕೊಳ್ಳುವಂತಾಗಲಿ ಎಂದು ಶಿಬಿರಾರ್ಥಿಗಳಿಗೆ ಶುಭ ಕೋರಿದರು.


ಈ ವೇಳೆ ಗ್ರಾಮದ ಮುಖಂಡರಾದ ಎಂಜಿನಿಯರ್ ಜೈ ಕುಮಾರ್, ನಾಗರಾಜು, ಮರಳಾಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬೋರೇಗೌಡ, ಕಾರ್ಯದರ್ಶಿ ಮಂಜುನಾಥ್, ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ ಪ್ರಹ್ಲಾದ್ ರಾವ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ.ರಾಘವೇಂದ್ರ ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು, ಗ್ರಾಮದ ಜೈ ಶ್ರೀರಾಮ್ ಯುವಕರ ಸಂಘದ ಸದಸ್ಯರು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.