ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ. ಸಾರ್ವಜನಿಕರು ವೆಬ್ಸೈಟ್: ceo.karnataka/gov.in ಇಲ್ಲಿ ವೀಕ್ಷಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಉಪಸ್ಥಿತಿಯಲ್ಲಿ ಮತದಾರರ ಪಟ್ಟಿ ನೋಂದಣಿ ಮತ್ತು ಪರಿಷ್ಕರಣೆ ಕುರಿತು ಏರ್ಪಡಿಸಲಾಗಿದ್ದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅರ್ಜಿದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಿದ ಅರ್ಜಿದಾರರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದು. ಆಕ್ಷೇಪಣೆಗಳಿದ್ದಲ್ಲಿ 2023ರ ಡಿ.2 ರೊಳಗೆ ಸಲ್ಲಿಸಬಹುದು. ಅರ್ಹ ಶಿಕ್ಷಕರು ಮತ್ತು ಪದವೀಧರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಮೂನೆ-18 ಮತ್ತು 19ರಲ್ಲಿ ಸಲ್ಲಿಸಬಹುದು. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು 2023ರ ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದರು.
ಈ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯೋಗವು ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈವರೆಗೆ 66,982 ಅರ್ಜಿಗಳು ಸ್ವೀಕಾರಗೊಂಡಿದ್ದು, ದಾಖಲಾತಿಗಳು ಸರಿಯಾಗಿದ್ದ 65,566 ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ. ಉಳಿದ 1,416 ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕತಗೊಳಿಸಲಾಗಿದೆ. 33,964 ಪುರುಷರು, 31,600 ಸ್ತ್ರೀಯರು, 2 ಇತರರು ಸೇರಿದಂತೆ ಒಟ್ಟು, 65,566 ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.ಶಿಕ್ಷಕರ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕ್ಷೇತ್ರದ ವ್ಯಾಪ್ತಿಯಲ್ಲಿ 17,402 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆ ಪೈಕಿ 16,950 ಸ್ವೀಕಾರಗೊಂಡಿದ್ದು, 452ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕತಗೊಳಿಸಲಾಗಿದೆ. ಮತದಾರರ ಪಟ್ಟಿಯಲ್ಲಿ 7,833 ಪುರುಷರು, 9,117 ಸ್ತ್ರೀಯರು ಸೇರಿದಂತೆ ಅರ್ಹರಾದ ಒಟ್ಟು 16,950 ಅರ್ಜಿದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು.
ರಾಜ್ಯ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ತಾತ್ಕಾಲಿಕ ಮತ್ತು ಸಾಮಾನ್ಯ ಹುದ್ದೆಗಳಿಗೆ 2023 ರ ನವೆಂಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಉಲ್ಲೇಖಿಸಿ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸುವ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಪ್ರಸ್ತುತ ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ ಅವರ ರಾಜಿನಾಮೆಯಿಂದ ತೆರವಾದ ಸ್ಥಾನ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್. ಭೋಜೇಗೌಡ ಅವರ ಅವಧಿ ಪೂರ್ಣಗೊಳ್ಳಲಿದೆ.ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳು ಸೇರಿದಂತೆ ಶಿವಮೊಗ್ಗ ಜಿಲ್ಲೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ವ್ಯಾಪ್ತಿಗೊಳಪಡಲಿವೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ವ್ಯಾಪ್ತಿಗೊಳಪಡಲಿವೆ ಎಂದರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು, ಕೈಬಿಡಲು, ತಿದ್ದುಪಡಿ ಮಾಡಲು ಹಾಗೂ ಸ್ಥಳಾಂತರಿಸಲು ಈವರೆಗೆ ಸ್ವೀಕರಿಸಲಾದ ಅರ್ಜಿಗಳ ಕರಡು ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ಕುಮಾರ್, ಚುನಾವಣಾ ತಹಸೀಲ್ದಾರ್ ಮಂಜುನಾಥ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.- - - -23ಕೆಪಿಎಸ್ಎಂಜಿ15:
ಶಿವಮೊಗ್ಗ ಡಿಸಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಉಪಸ್ಥಿತಿಯಲ್ಲಿ ಮತದಾರರ ಪಟ್ಟಿ ನೋಂದಣಿ ಮತ್ತು ಪರಿಷ್ಕರಣೆ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿದರು.