ಉಡುಪಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಗೆ ಸಂಬಂಧಿಸಿ ಆ. 5ರಂದು ಕರಡು ಪಟ್ಟಿ ಪ್ರಕಟಿಸಲಾಗುವುದು. ಇದರಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮಾತ್ರ ಸಂಬಂಧಪಟ್ಟ 11 ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕೆ ಹೊರತು ಹೆಸರು ಇದ್ದವರು ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಾದ ಅಗತ್ಯ ಇರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.
ಶುಕ್ರವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನಲ್ಲಿ ನಡೆದ ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿಎಲ್ಓಗಳು ಮನೆ ಮನೆಗೆ ತೆರಳಿ ದ್ವಿಪ್ರತಿ ಫಾರ್ಮ್ಗಳನ್ನು ನೀಡುತಿದ್ದಾರೆ, ಈ ಫಾರ್ಮ್ ಸಲ್ಲಿಸಿಯೂ ಕರಡು ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ, ಅವರು ತಮ್ಮಲ್ಲಿರುವ ಇನ್ನೊಂದು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಸರಿನಲ್ಲಿ ವ್ಯತ್ಯಾಸ ಇದ್ದವರಿಗೆ ನಾವೇ ನೊಟೀಸ್ ನೀಡುತ್ತೇವೆ. ಅವರು ತಮ್ಮ ಪ್ರಸ್ತುತ ಹೆಸರು ಬದಲಾಗಿರುವುದಕ್ಕೆ ಸಂಬಂಧಿಸಿ ದಾಖಲೆಯನ್ನು ಸಲ್ಲಿಸಬೇಕು. ಕರಡು ಪಟ್ಟಿಯಲ್ಲಿ ಇದ್ದವರ ಹೆಸರು ಯಾವುದೇ ಕಾರಣಕ್ಕೂ ಅಂತಿಮ ಪಟ್ಟಿಯಲ್ಲಿ ಬಿಟ್ಟು ಹೋಗುವುದಿಲ್ಲ. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.ಜಿಲ್ಲಾಧಿಕಾರಿ ಸಂಘದ ‘ಸನ್ಮತಿ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆ ಬಿಡುಗಡೆಗೊಳಿಸಿದರು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಿದ್ದರು. ವಾರ್ತಾಧಿಕಾರಿ ಮಂಜುನಾಥ್, ಸಂಘದ ಕೋಶಾಧಿಕಾರಿ ಹರೀಶ್ ಕುಂದರ್, ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಗಣೇಶ್ ಕಲ್ಯಾಣಪುರ ಇದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ನಿರೂಪಿಸಿದರು.