ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯು ಸೋಮವಾರ (ಜೂ.30)ದಿಂದ ಆರಂಭಗೊಂಡು ಜುಲೈ ೨೯ರವರೆಗೆ ನಡೆಯಲಿದೆ ಎಂದು ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ಹೇಳಿದರು.ತಾಲೂಕಿನ ಉಮ್ಮಡಹಳ್ಳಿ ಗ್ರಾಮದಲ್ಲಿರುವ ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮನೆಯಲ್ಲಿ ಆಯೋಜಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ (ಗಣತಿ ನಮೂನೆ) ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಬೇಕು. ಬಿಎಲ್ಒಗಳು ಮನೆಗೆ ತರುವ ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆ ನೀಡಿ ನೋಂದಣಿ ಮಾಡಿಸಿಕೊಂಡು ಮತದಾನದ ಹಕ್ಕು ಉಳಿಸಿಕೊಳ್ಳುವಂತೆ ಸಲಹೆ ನೀಡಿದರು.ಬಿಎಲ್ಓಗಳು ನಿಮ್ಮ ಮನೆಗಳಿಗೆ ಬಂದು ಅರ್ಜಿ ನೀಡಲಿದ್ದಾರೆ. ೩೦ ದಿನಗಳ ಅವಧಿಯಲ್ಲಿ ಕಡ್ಡಾಯವಾಗಿ ಈ ಎನ್ಯುಮರೇಷನ್ ಅರ್ಜಿ ತುಂಬಿ ಅಗತ್ಯ ದಾಖಲೆಗಳು ಹಾಗೂ ಹೊಸ ಫೋಟೋಗಳೊಂದಿಗೆ ಸಲ್ಲಿಕೆ ಮಾಡಬೇಕು. ಇದು ಮತದಾರರ ಕರ್ತವ್ಯವಾಗಿದೆ. ಈ ಅರ್ಜಿ ಸಲ್ಲಿಕೆ ಮಾಡದಿದ್ದರೆ ಮತದಾನದ ಹಕ್ಕು ಕಳೆದುಕೊಳ್ಳುತ್ತೀರಿ. ಆ.೫ರಂದು ಕರಡು ಮತಪಟ್ಟಿ ಪ್ರಕಟಿಸಲಾಗುವುದು. ಬಿಎಲ್ಓಗಳು ಮೂರು ಬಾರಿ ನಿಮ್ಮ ಮನೆಗೆ ಬಂದು ಅರ್ಜಿ ನೀಡುತ್ತಾರೆ. ನೀವು ಅರ್ಜಿ ಸ್ವೀಕರಿಸಿ ಸಲ್ಲಿಸದಿದ್ದರೆ ಹಕ್ಕು ಕಳೆದುಕೊಳ್ಳುತ್ತೀರಿ ಎಂದು ಎಚ್ಚರಿಸಿದರು.
ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ನೆರೆ-ಹೊರ ರಾಜ್ಯಗಳಿಂದ ಬಂದಿರುವ ವಲಸೆ ಮತದಾರರ ಪತ್ತೆಗೆ ಈ ವ್ಯವಸ್ಥೆ ನಡೆಯುತ್ತಿದೆ, ಪ್ರತಿ ಬೂತ್ ಮಟ್ಟದಲ್ಲಿ ಎಲ್ಲರ ಸಹಕಾರಿಂದ ಯಶಸ್ಸಿಗೊಳಿಸಿಸೋಣ ಎಂದು ನುಡಿದರು.
ಮತದಾನದ ಹಕ್ಕು ಕಳೆದುಕೊಳ್ಳುವವರಿಗೆ ಮುಂದೆ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಪಡಿತರ ಹಂಚಿಕೆಯಲ್ಲಿ ಮತದಾರರಿಗೆ ಮಾತ್ರ ನೀಡಲಾಗುತ್ತಿದೆ. ಇದೇ ರೀತಿ ಬೇರೆ ರಾಜ್ಯಗಳಲ್ಲೂ ಆದೇಶ ಹೊರಡಿಸಲಾಗಿದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಶ್ವನಾಥ್, ಆರ್ಐ ಮಂಜುನಾಥ್, ಪಿಡಿಒ ಮಂಜು, ಪ್ರದೀಶ್, ವಿಎಒ ಕುಮಾರ್, ಆರ್ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್ ಮತ್ತಿತರರಿದ್ದರು.