ಸಾರಾಂಶ
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗೀಯ ಕಚೇರಿ ಸಂಸ್ಥೆಯ ನೌಕರರ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಮಾರ್ಗದರ್ಶನ ಮತ್ತು ಸಂವಾದದಲ್ಲಿ ಕಾರ್ಯಕ್ರಮ ನಡೆಯಿತು.
ಧಾರವಾಡ: ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆಯತ್ತ ಮುನ್ನಡೆಯಬೇಕು. ಕಷ್ಟಪಟ್ಟು ಓದಿದಾಗ ಮಾತ್ರ ಉನ್ನತ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ವಾಯುವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹೇಳಿದರು.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗೀಯ ಕಚೇರಿ ಸಂಸ್ಥೆಯ ನೌಕರರ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಮಾರ್ಗದರ್ಶನ ಮತ್ತು ಸಂವಾದದಲ್ಲಿ ಅವರು ಮಾತನಾಡಿದರು.ಸಂಸ್ಥೆಯ ಏಳಿಗೆಗಾಗಿ ಸಾರ್ವಜನಿಕ ಸೇವೆ ಮಾಡುತ್ತಿರುವ ಸಂಸ್ಥೆಯ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿಗಳ ಮಕ್ಕಳು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ, ಅವರನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ನಿಮ್ಮ ಪಾಲಕರು ಸಾರಿಗೆ ಸಂಸ್ಥೆಯಲ್ಲಿ ಅತ್ಯವಶ್ಯ ಸಾರ್ವಜನಿಕ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಹೆಮ್ಮೆ ನಿಮಗಿರಲಿ ಎಂದರು.
ನಾವು ಯಾವುದಕ್ಕೆ ಆದ್ಯತೆ ಕೊಡುತ್ತೇವೆ ಎಂಬುದರ ಮೇಲೆ ನಮ್ಮ ಭವಿಷ್ಯ ನಿರ್ಧಾರವಾಗುತ್ತದೆ. ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಒಳ್ಳೆಯ ಸಾಧನೆ ಮಾಡಿ ಎಂದರು. ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಲ್ಯಾಣಾಧಿಕಾರಿ ಪಿ.ವೈ. ನಾಯಕ, ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಡಾ. ಶಶಿಧರ ಚನ್ನಪ್ಪಗೌಡರ, ಸಂಚಾರಾಧಿಕಾರಿ ಸಂತೋಷ ಕಾಮತ, ವಿಭಾಗೀಯ ತಾಂತ್ರಿಕ ಶಿಲ್ಪಿಗಳಾದ ನಿಂಗನಗೌಡ ಪಾಟೀಲ, ಅಧಿಕಾರಿಗಳಾದ ವಿವೇಕಾನಂದ ಘುಳಪ್ಪನವರ, ಇಸ್ಮಾಯಿಲ್ ನವಲಗುಂದ, ಶಂಕರಪ್ಪ, ನವೀನಕುಮಾರ ತಿಪ್ಪಾ ಇದ್ದರು.