ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ೧೮೭ ಕೋಟಿ ರು. ಹಣಕಾಸು ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಈ ಹಿಂದೆ ರಾಜೀನಾಮೆ ನೀಡಿದ್ದ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಅಕ್ಷಮ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಹೇಳಿದರು.
ಮಡಿಕೇರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ೧೮೭ ಕೋಟಿ ರು. ಹಣಕಾಸು ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಈ ಹಿಂದೆ ರಾಜೀನಾಮೆ ನೀಡಿದ್ದ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಅಕ್ಷಮ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಹೇಳಿದರು.ನಾಗೇಂದ್ರ ವಿರುದ್ಧ ಆರೋಪ ಪಟ್ಟಿ ಇದ್ದರೂ ಮಂತ್ರಿ ಮಾಡಿರುವುದು ಪರಿಶಿಷ್ಟ ಪಂಗಡದವರಿಗೆ ಮಾಡಿದ ದ್ರೋಹವಾಗಿದೆ. ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ಮುಖ್ಯಮಂತ್ರಿಗಳಿಗೆ ಇದ್ದ ಅನಿವಾರ್ಯತೆ ಏನು? ಹೈಕಮಾಂಡ್ ಒತ್ತಡವಿತ್ತೇ ಅಥವಾ ಬೇರೆ ಭಯವಿತ್ತೇ ಎಂದು ಪ್ರಶ್ನಿಸಿದ ಅವರು, ಈ ಹಗರಣದಿಂದಾಗಿ ಅಮಾಯಕ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬುದನ್ನು ಸರ್ಕಾರ ನೆನಪಿಸಿಕೊಳ್ಳಬೇಕು. ನಾಗೇಂದ್ರ ಅವರಿಗೆ ಇನ್ನೂ ಕ್ಲೀನ್ಚೀಟ್ ಸಿಕ್ಕಿಲ್ಲ. ತನಿಖೆ ನಡೆಯುತ್ತಿದೆ. ಆದ್ದರಿಂದ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಕೂಡಲೇ ಪಡೆಯಬೇಕು ಎಂದು ಆಗ್ರಹಿಸಿದರು.ನಾಗೇಂದ್ರ ರಾಜೀನಾಮೆ ನೀಡುವವರೆಗೆ ಸದನದ ಒಳಗೆ ಮತ್ತು ಹೊರಗೆ ಹಾಗೂ ರಾಜ್ಯಾದ್ಯಂತ ಹೋರಾಟ ಮುಂದುವರಿಯಲಿದೆ. ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.ಕಸ್ತೂರಿ ರಂಗನ್ ವರದಿ ಕುರಿತು ಮಾತನಾಡಿದ ಅವರು, ಕೊಡಗು-ಮೈಸೂರು ಸಂಸದರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ರೈತರು, ಕೃಷಿಕರು ಮತ್ತು ಸ್ಥಳೀಯರ ಜೀವನೋಪಾಯಕ್ಕೆ ತೊಂದರೆಯಾಗದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಲಾಗುವುದು. ಇದು ಜಿಲ್ಲೆಯ ಸಮಸ್ಯೆಯಾಗಿರುವುದರಿಂದ ರಾಜಕೀಯ ಮಾಡದೆ ಎಲ್ಲ ಸಂಘ-ಸಂಸ್ಥೆಗಳಿಂದ ಆಕ್ಷೇಪ ಸಲ್ಲಿಸುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಮಳೆಯಿಂದ ರೈತರ ಬೆಳೆ, ಬಡವರ ಮನೆ, ರಸ್ತೆ, ಚರಂಡಿ ಹಾನಿಯಾಗಿದೆ. ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ವೃದ್ಧಾಪ್ಯ, ವಿಧವಾ, ವಿಕಲಚೇತನ ವೇತನ ೩ ತಿಂಗಳಿಂದ ಬಾಕಿಯಿದೆ. ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಅಕ್ರಮದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಮತ್ತೆ ಕ್ಯಾಬಿನೆಟ್ಗೆ ಸೇರಿಸಿರುವ ಸಿಎಂಗೆ ನೈತಿಕತೆಯಿದೆಯೇ? ಸರ್ಕಾರದ ಯೋಜನೆಗಳಲ್ಲಿ ಜಾತಿ ಆಧರಿತ ಮಾನದಂಡ ತರುವುದನ್ನು ನಾವು ವಿರೋಧಿಸುತ್ತೇವೆ. ಸಿಎಂ ಒಳ್ಳೆಯ ಕೆಲಸ ಮಾಡಿದರೆ ನಮ್ಮ ಸಹಕಾರವೂ ಇರುತ್ತದೆ. ಕೊಡಗು ಜಿಲ್ಲೆಗೆ ಸಂಪುಟದಲ್ಲಿ ಒಂದು ಸ್ಥಾನ ಸಿಗಬಹುದು ಎಂದು ನಿರೀಕ್ಷೆ ಇತ್ತು. ಆದರೆ ಈಗಾಗಲೇ ನೀಡಿದ್ದ ಉಪಸಭಾಧ್ಯಕ್ಷ ಸ್ಥಾನವನ್ನೂ ಕಸಿದುಕೊಳ್ಳಲಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್ ಹಾಗೂ ಮಾಧ್ಯಮ ಪ್ರಮುಖ ಸಜಿಲ್ ಕೃಷ್ಣ ಉಪಸ್ಥಿತರಿದ್ದರು.
