ಯುವಶಕ್ತಿ ಬಳಕೆಗೆ ಮಾದಕ ವ್ಯಸನದ ಸವಾಲು: ಡಿಸಿ ವಿದ್ಯಾಕುಮಾರಿ

| Published : Aug 13 2024, 12:55 AM IST

ಸಾರಾಂಶ

ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಬಾರತೀಯ ರೆಡ್ ಕ್ರಾಸ್ ವತಿಯಿಂದ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ಜಾಥಾ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಮ್ಮ ದೇಶದಲ್ಲಿ ಅಪಾರವಾದ ಯುವಶಕ್ತಿಯಿದೆ. ಆದರೆ ಈ ಯುವ ಶಕ್ತಿಯ ಸದ್ಬಳಕೆಯಲ್ಲಿ ಮಾದಕ ವ್ಯಸನವು ಒಂದು ಸವಾಲಾಗಿದೆ. ಈ ಮಾದಕ ವ್ಯವಸದ ವಿರುದ್ಧ ಆಂದೋಲನವನ್ನು ಪ್ರತಿಯೊಬ್ಬ ವ್ಯಕ್ತಿಯ ಅಂತರಂಗಕ್ಕೂ ಮುಟ್ಟಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ಅವರು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಬಾರತೀಯ ರೆಡ್ ಕ್ರಾಸ್ ವತಿಯಿಂದ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಯುವ ಜನತೆಯು ಜವಾಬ್ದಾರಿಗಳನ್ನು ಮರೆತು ಮಾದಕ ವ್ಯಸನಗಳ ಸೇವನೆಯಿಂದ ಸಮಾಜ ಘಾತುಕ ಶಕ್ತಿಗಳಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ, ಈ ಹಿನ್ನೆಲೆಯಲ್ಲಿ ಮುಕ್ಯವಾಗಿ ಯುವಜನತೆಯಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಗಣನಾಥ್ ಎಕ್ಕಾರು ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೊಬೈಲ್ ಆರೋಗ್ಯ ವಾಹನಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಟಿ ಸಿದ್ದಲಿಂಗಪ್ಪ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಐ.ಪಿ. ಗಡಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ., ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನ ಕಲ್ಯಾಧಿಕಾರಿ ರತ್ನಾ, ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ನೋಡೆಲ್ ಅಧಿಕಾರಿ ಜಯಶ್ರೀ, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಭಾರತೀಯ ರೆಡ್ ಕ್ರಾಸ್‌ ಜಿಲ್ಲಾ ಸಭಾಪತಿ ಬಸ್ರೂರ್ ರಾಜೀವ ಶೆಟ್ಟಿ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ನಿರೂಪಿಸಿದರು.