ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ನಶೆ ಮುಕ್ತ ಯುವ’ ಅಭಿಯಾನ ಕಾರ್ಯಕ್ರಮದಲ್ಲಿ ಒಂದೂವರೆ ಸಾವಿರ ವಿದ್ಯಾರ್ಥಿಗಳು, ಮಾದಕವಸ್ತುಗಳಿಂದ ದೂರವಿರುವ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.ಭಾನುವಾರ ದಿಶಾಬೋಧ್ ಸುಸ್ಥಿರ ಸಮುದಾಯ ಅಭಿವೃದ್ಧಿ ಫೌಂಡೇಶನ್ ಹಮ್ಮಿಕೊಂಡಿದ್ದ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ವಿದ್ಯಾರ್ಥಿಗಳು ಆಲಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪ ಕುಲಸಚಿವ ಡಾ. ಪಿ. ವಸಂತ ಶೆಟ್ಟಿ, ರಾಜ್ಯದ 15 ಜಿಲ್ಲೆಗಳ 17 ಸ್ಥಳಗಳಲ್ಲಿ 1.30 ಲಕ್ಷ ವಿದ್ಯಾರ್ಥಿಗಳಿಗೆ ಮಾದಕವ್ಯಸನಗಳಿಂದ ದೂರವಿರುವ ಕುರಿತು ‘ನಶೆ ಮುಕ್ತ ಭಾರತ’ ಅಭಿಯಾನದಡಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಯುವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಬಾರದು. ಒಂದು ವೇಳೆ ವ್ಯಸನಕ್ಕೆ ದಾಸರಾಗಿದ್ದರೆ ಅದರಿಂದ ಹೊರ ಬರಬೇಕು ಎನ್ನುವ ಉದ್ದೇಶದಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯವಂತ ವಿದ್ಯಾರ್ಥಿಗಳು, ಆರೋಗ್ಯವಂತ ಸಮಾಜದಿಂದ ಮಾತ್ರ ದೇಶದ ಭವಿಷ್ಯ ಸದೃಢವಾಗಿರಲು ಸಾಧ್ಯ. ಪ್ರಧಾನಮಂತ್ರಿಯವರ ವಿಕಸಿತ ಭಾರತ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಸಂತ ಶೆಟ್ಟಿ ಹೇಳಿದರು.
ಬಿಜಿಎಸ್ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನ ಪ್ರಾಂಶುಪಾಲ ಡಾ. ಮಂಜುನಾಥ ಮಾತನಾಡಿ, ಸ್ವಾಸ್ಥ್ಯ ಸಮಾಜವನ್ನು ರೂಪಿಸುವ ಜವಾಬ್ದಾರಿ ನಮ್ಮ ಮೇಲೂ ಇದೆ. ನಮ್ಮ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಂದುವರೆ ಸಾವಿರ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗಿಯಾಗಿದ್ದಾರೆ. ಇದನ್ನು ಕೇವಲ ಒಂದು ದಿನದ ಕಾರ್ಯಕ್ರಮ ಎಂದು ಸೀಮಿತಗೊಳಿಸದೆ ನಿರಂತರವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ನ ಪ್ರಾಂಶುಪಾಲ ಡಾ.ದಿನೇಶ್ ಮಾತನಾಡಿ, ಮಾದಕವಸ್ತುಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡುತ್ತೇವೆ. ಬೇರೆ ಮಕ್ಕಳಿಗೂ ಅವರು ಪಾಠ ಮಾಡುವಂತಾಗಬೇಕು. ಈ ಅಭಿಯಾನದ ದೊಡ್ಡ ಪ್ರಮಾಣದಲ್ಲಿ ನಡೆಯಬೇಕು ಎಂದು ಹೇಳಿದರು.