ಸಾರಾಂಶ
ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಸರ್ಕಾರವು ಪ್ರತೀ ಶುಕ್ರವಾರ ಒಣ ದಿನ ಎಂದು ಆಚರಿಸಲು ಸೂಚಿಸಿದ್ದು, ಅದರಂತೆ ಪ್ರತೀ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಯಾವುದೇ ಮನೆಗಳ ಸುತ್ತಮುತ್ತ ನೀರು ನಿಂತಿದ್ದಲ್ಲಿ, ಅದನ್ನು ತೆರವು ಮಾಡಿ, ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಡೆಂಘೀ ನಿಯಂತ್ರಣಕ್ಕೆ ಜನರು ಕೂಡ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದ್ದಾರೆ.ಅವರು ಶುಕ್ರವಾರ ಇಲ್ಲಿನ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿ.ಪಂ., ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ತಾ.ಪಂ. ಸಹಯೋಗದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರವು ಪ್ರತೀ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಮಾಡುವಂತೆ ತಿಳಿಸಿದ್ದು, ಅಧಿಕಾರಿಗಳೇ ಜನರ ಬಳಿ ತೆರಳಿ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದ್ದು, ಸಾರ್ವಜನಿಕರ ಖಾತೆ ಬದಲಾವಣೆ, ಹಕ್ಕುಪತ್ರ ವಿತರಣೆ, ಪ್ರಮಾಣ ಪತ್ರ ಇತ್ಯಾದಿ ಸಮಸ್ಯೆಗಳಿಗೆ ಅಧಿಕಾರಿಗಳ ನೇತೃತ್ವದಲ್ಲಿ ತಕ್ಷಣವೇ ಸ್ಪಂದಿಸಬೇಕು ಎಂದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕಳೆದ ಸಾಲಿನ ಜನಸ್ಪಂದನದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಪರಿಹಾರ ಸಿಕ್ಕಾಗ ಮಾತ್ರ ಈ ಯೋಜನೆ ಅರ್ಥಪೂರ್ಣವಾಗಿರುತ್ತದೆ. ಜನರು ತಮ್ಮ ಅರ್ಜಿಗಳೊಂದಿಗೆ ಕಚೇರಿಗೆ ಅಲೆಯುವಂತಾಗಬಾರದು. ಈ ಯೋಜನೆ ಇನ್ನಷ್ಟು ಸರಳೀಕೃತವಾಗಬೇಕು ಎಂದು ಹೇಳಿದರು.ಈ ಸಂದರ್ಭ ಕಳೆದ ಸಾಲಿನಲ್ಲಿ ಬ್ರಹ್ಮಾವರ ವಲಯದ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ಸಹನಾ, ಸನಿತಾ, ಅಮೃತ ಅಡಿಗ ಹಾಗೂ ಧರಿತ್ರಿ ಕಾಮತ್ಗೆ ಲ್ಯಾಪ್ಟಾಪ್ ವಿತರಿಸಲಾಯಿತು.
ಎಎಸ್ಪಿ ಪರಮೇಶ್ವರ್ ಹೆಗಡೆ, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್., ಜಿ.ಪಂ. ಉಪಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಬ್ರಹ್ಮಾವರ ತಾ.ಪಂ. ಇ.ಓ. ಇಬ್ರಾಹಿಂಪುರ, ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನಿತ್ಯಾನಂದ ಬಿ.ಆರ್. ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಬಸ್ ಸೌಲಭ್ಯ, ಪ್ರಾ.ಆ. ಕೇಂದ್ರಕ್ಕೆ ಶುಶ್ರೂಷಕಿಯರ ಕೊರತೆ, ವಿದ್ಯುತ್ ಸಂಪರ್ಕ ವಿಳಂಬ, ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕುರಿತು, ರಸ್ತೆ ದುರಸ್ತಿ, ಸರ್ಕಾರಿ ಸ್ಥಳ ಅತಿಕ್ರಮಣ, ಕಟ್ಟಡಗಳ ಸಕ್ರಮ, ಪ್ಲಾಟಿಂಗ್ ಕಾರ್ಯ ಖಾತೆ ಬದಲಾವಣೆ, 94 ಸಿಯಲ್ಲಿ ಹಕ್ಕುಪತ್ರ, ಪಹಣಿ ತಿದ್ದುಪಡಿ, ನೀರಿನ ಸೌಲಭ್ಯ, ಸೇರಿದಂತೆ ಸುಮಾರು 91 ಅಹವಾಲುಗಳು ಸಲ್ಲಿಕೆಯಾಗಿದ್ದವು.