ಕನ್ನಡಪ್ರಭ ವಾರ್ತೆ ಬೆಳಗಾವಿ ನಾಳೆಯ ಬಜೆಟ್‌ನಲ್ಲಿ ದಲಿತರಿಗಾಗಿ ಶೇ.24 ರಷ್ಟು ಹಣವನ್ನು ಮೀಸಲಿಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಾಳೆಯ ಬಜೆಟ್‌ನಲ್ಲಿ ದಲಿತರಿಗಾಗಿ ಶೇ.24 ರಷ್ಟು ಹಣವನ್ನು ಮೀಸಲಿಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಡಿಸಿ ಕಚೇರಿ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯಡಿ ನಡೆಯುವ ವಿಚಾರಣೆಗಳ ಮೇಲೆ ನಿಗಾವಹಿಸಲು ಪ್ರತ್ಯೇಕ ಸಮಿತಿ ರಚಿಸಬೇಕು. ಪ್ರತಿ ಗ್ರಾಮದಲ್ಲಿ ದಲಿತರಿಗೆ ಕಡ್ಡಾಯವಾಗಿ ಸ್ಮಶಾನ ಭೂಮಿ ಮೀಸಲಿಡಬೇಕು. ಒಳ ಮೀಸಲಾತಿ ಅನುಷ್ಠಾನದಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸಬೇಕು. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಖಾಸಗಿ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೊಳಿಸಬೇಕು. ಎಸ್ಸಿ, ಎಸ್ಟಿ ಸಮುದಾಯದ ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಫಾರಂ 57ರ ಅಡಿ ಅರ್ಜಿ ಸಲ್ಲಿಸಿರುವವರಿಗೆ ತಕ್ಷಣವೇ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ವಿತರಿಸಬೇಕು. ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಬೇಕು. ಹಾಸ್ಟೆಲ್‌ಗಾಗಿ ಅರ್ಜಿ ಸಲ್ಲಿಸುವ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರುದ್ರಪ್ಪ ನಿಂಗಣ್ಣವರ, ಅರ್ಜುನ ಕಾಂಬಳೆ, ಪ್ರಕಾಶ ಮರಡಿ, ಅಶೋಕ ಅಪ್ಪುಗೋಳ, ಚಂದ್ರಕಾಂತ ಕಾಂಬಳೆ, ಶಿವಾಜಿ ಭಲೋಗಿ, ಕಲ್ಲಪ್ಪ ತಳವಾರ, ಬಾಬು ಕಾಂಬಳೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು.