ಜಿಲ್ಲಾಧಿಕಾರಿಗಳಿಂದ ದಸರಾ ಲೋಗೋ ಬಿಡುಗಡೆ

| Published : Sep 29 2024, 01:35 AM IST

ಸಾರಾಂಶ

ಸಿಂಧನೂರಿನ ನಗರಸಭೆ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ನಿತೀಶ್ ಕೆ. ಸಿಂಧನೂರು ದಸರಾ ಉತ್ಸವದ ಲೋಗೋ ಬಿಡುಗಡೆ ಮಾಡಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಪ್ರಥಮ ಬಾರಿಗೆ 9 ದಿನಗಳ ಕಾಲ ದಸರಾ ಉತ್ಸವವನ್ನು ಮೈಸೂರು ದಸರಾ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.

ಶನಿವಾರ ನಗರಸಭೆ ಸಭಾಂಗಣದಲ್ಲಿ ‘ಸಿಂಧನೂರು ದಸರಾ ಉತ್ಸವ’ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಅ.4 ರಿಂದ 12ರ ವರೆಗೆ ದಸರಾ ಉತ್ಸವವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದ್ದು, ಈಗಾಗಲೆ ಹಲವು ಸುತ್ತಿನ ಸಭೆಗಳನ್ನು ಮಾಡಲಾಗಿದೆ. ರಾಯಚೂರಿನಲ್ಲಿಯೂ ಈ ಸಂಬಂಧ ವಿಸ್ತೃತ ಸಭೆ ನಡೆಸಲಾಗಿದೆ ಎಂದರು.

ದಸರಾ ಉತ್ಸವ ವಿಜೃಂಭಣೆಯಿಂದ ನಡೆಸಲು ಈಗಾಗಲೆ ಹಲವು ಸಮಿತಿಗಳನ್ನು ರಚಿಸಲಾಗಿದೆ. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳನ್ನು ಹಾಗೂ ಅಧಿಕಾರಿಗಳನ್ನೊಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಎಲ್ಲ ಸಮಿತಿಗಳು ಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಊಟದ ವ್ಯವಸ್ಥೆ, ನಿರಂತರ ವಿದ್ಯುತ್ ಸಂಪರ್ಕಕ್ಕೆ ಈಗಾಗಲೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ. ಸಿಂಧನೂರಿನ ದಸರಾ ಉತ್ಸವ ಮೈಸೂರು ದಸರಾ ಮಾದರಿಯಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಸಿಂಧನೂರು ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.4 ರಂದು ಸಿಂಧನೂರಿಗೆ ಆಗಮಿಸಲಿದ್ದು, ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸರ್ಕಾರಿ ಮಹಾವಿದ್ಯಾಲಯದಲ್ಲಿ ಉದ್ಘಾಟನೆ ನಡೆಯಲಿದ್ದು, 9 ದಿನಗಳ ಕಾಲ ಆರ್‌ಜಿಎಂ ಶಾಲಾ ಆವರಣ, ಟೌನ್‌ಹಾಲ್‌ಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕಗಳು, ನೃತ್ಯ ರೂಪಕಗಳು, ಕೃಷಿ ಕುರಿತ ಗೋಷ್ಠಿಗಳು ನಡೆಯಲಿವೆ ಎಂದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ದೇವೇಂದ್ರಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿದರು.

ತಹಸೀಲ್ದಾರ್ ಅರುಣ ಎಚ್.ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಲಿಂಗಸುಗೂರು ಉಪವಿಭಾಗದ ಸಹಾಯಕ ಆಯುಕ್ತ ಬಸವಣ್ಣಪ್ಪ ಕಲ್‌ಶೆಟ್ಟಿ, ತಾಪಂ ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಉಪಸ್ಥಿತರಿದ್ದರು.

ನಗರಸಭೆ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ಪಾಲ್ಗೊಂಡಿದ್ದರು.