ಸಾರಾಂಶ
ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರ್ಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ.
ದಾಂಡೇಲಿ:
ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರ್ಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ. ಶಿಕ್ಷಣ, ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಮನಸ್ಸಿನಲ್ಲಿ ಜಾತಿ, ಧರ್ಮಾಂಧತೆ ಬಿತ್ತುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.ನಗರದಲ್ಲಿ ಡಿವೈಎಫ್ಐ ಜಿಲ್ಲಾ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಡಿವೈಎಫ್ಐ ೧೨ನೇ ರಾಜ್ಯ ಸಮ್ಮೇಳನದ ಲೋಗೊ ಅನಾವರಣಗೊಳಿಸಿ ಮಾತನಾಡಿದರು.ಉದ್ಯೋಗ ಸೃಷ್ಟಿಯ ಭರಾಟೆಯೊಂದಿಗೆ ಸರ್ಕಾರಗಳು ಕಾರ್ಪೋರೇಟ್ ಕುಳ ಮತ್ತು ಬಂಡವಾಳಗಾರರಿಗೆ ಕೈಗಾರಿಕೆ ಸ್ಥಾಪಿಸಲು ಭೂಮಿ ನೀಡುತ್ತಿವೆ. ಆದರೆ ಆ ಕಂಪನಿಗಳು ಕೈಗಾರಿಕೆ ಆರಂಭಿಸದೇ ಇರುವುದರಿಂದ ಉದ್ಯೋಗ ಸೃಷ್ಟಿ ಭಾಷಣದಲ್ಲಿ ಉಳಿಯುತ್ತದೆ ಎಂದ ಅವರು, ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಸರೋಜಿನಿ ಮರ್ಹಿಷಿ ವರದಿ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.ದೇಶದಲ್ಲಿ ನಿರುದ್ಯೋಗ ಪ್ರಮಾಣ ಏರುತ್ತಿದೆ. ಉದ್ಯೋಗ ಸೃಷ್ಟಿಸಲು ವಿಫಲವಾದ ಕೇಂದ್ರ ಸರ್ಕಾರ ಕೇವಲ ಭಾವನಾತ್ಮಕ ವಿಷಯ ಮನ್ನೆಲೆಗೆ ತಂದು ರಾಜಕೀಯ ಲಾಭಕ್ಕೆ ಹವಣಿಸುತ್ತಿರುವುದು ಜನತೆಗೆ ಎಸಗುತ್ತಿರುವ ದ್ರೋಹವಾಗಿದೆ ಎಂದ ಅವರು, ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ನೀಡಿದ ಮಾಹಿತಿಯಂತೆ ಕೇಂದ್ರ ಸರ್ಕಾರದಡಿ ೯.೭೯ ಲಕ್ಷ ಹುದ್ದೆ ಖಾಲಿ ಇವೆ. ಇವುಗಳನ್ನು ಭರ್ತಿಗೊಳಿಸಲು ಇಚ್ಛಾ ಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.ನಿರುದ್ಯೋಗ ಯುವಕ-ಯವತಿಯರಿಗೆ ಯುವನಿಧಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಕೇವಲ ಹಿಂದಿನ ವರ್ಷ ಉತ್ತೀರ್ಣರಾದವರಿಗೆ ಮಾತ್ರ ಯೋಜನೆ ಅನ್ವಯಿಸಿರುವುದರಿಂದ ಪದವಿ ಮುಗಿಸಿ ಐದು-ಹತ್ತು ವರ್ಷಗಳಿಂದ ಕೆಲಸ ಸಿಗದ ನಿರುದ್ಯೋಗಿಗಳಿಗೆ ಇದರಿಂದ ಯಾವುದೇ ಆಸರೆ ಸಿಗುವುದಿಲ್ಲ. ಆದರಿಂದ ಈ ಯೋಜನೆ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಗುತ್ತಿಗೆ, ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ನೌಕರರನ್ನು ಕಾಯಮಾತಿ ಮಾಡಿಕೊಳ್ಳಬೇಕೆಂದ ಅವರು, ಸಾಮರಸ್ಯ ಉದ್ಯೋಗ ಘನತೆಯ ಬದುಕಿಗಾಗಿ ಘೋಷಣೆಯಡಿ ಡಿವೈಎಫ್ಐ ೧೨ನೇ ರಾಜ್ಯ ಸಮ್ಮೇಳವನ್ನು ಫೆ. ೨೫,೨೬,೨೭ರಂದು ಮಂಗಳೂರಿನಲ್ಲಿ ಹಮ್ಮಿಕೊಂಡಿದೆ ಎಂದರು.ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಮಸನ್, ಇಮ್ರಾನ ಖಾನ, ಕಾಂತರಾವ, ಸಲ್ಮೂನ್ ರಾಜ, ಮಹಮ್ಮದ್ ಗೌಸ್ ಬಿಚ್ಚುನವರ, ಸುರೇಂದ್ರ ಕಾಂಬಳೆ, ಇರ್ಷಾದ ರಾಣೆಬೆನ್ನೂರ, ಸಾಹಿಲ ಶೇಖ, ಅಭಿ ಆರ್., ಇರ್ಷಾದ ಬೈಲೂರು, ಪ್ರಸಾದ ಹಂಡಿ, ನಯೀಮ ಜಮಾದಾರ, ದಾಮೋದರ ಶೆಟ್ಟಿ ಉಪಸ್ಥಿತರಿದ್ದರು.