ಸಾರಾಂಶ
ಕಾಫಿ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಕನ್ನಡಪ್ರಭ ವಾರ್ತೆ ಹಾಸನ
ಕಾಡಾನೆ ಹಾವಳಿ, ಅತಿವೃಷ್ಟಿ ಅನಾವೃಷ್ಟಿಯಿಂದ ಸಂಕಷ್ಟದಲ್ಲಿರುವ ಜಿಲ್ಲೆಯಲ್ಲಿ ಕಾಫಿ ಬೆಳಗಾರರು ಈ ಸಮಯದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲಕ್ಕೆ ಕಾಫಿ ತೋಟಗಳನ್ನು ಇ- ಹರಾಜಿಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ತೀರ್ಮಾನ ಕೈಗೊಂಡು ಕಾಫಿ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು. ದೇಶದಲ್ಲಿ ಸುಮಾರು ೨,೯೯,೦೦೦ ಮೆಟ್ರಿಕ್ ಟನ್ ಕಾಫಿ ಉತ್ಪಾದನೆ ಮಾಡುತ್ತಿದ್ದು, ಪ್ರಪಂಚದಲ್ಲಿಯೇ ೬ನೇ ಸ್ಥಾನದಲ್ಲಿದೆ. ಅದರಲ್ಲೂ ದಕ್ಷಿಣಾ ಭಾರತದಲ್ಲಿ ಕರ್ನಾಟಕ ಶೇಕಡಾ ೭೦% ಕಾಫಿ ಉತ್ಪಾದನೆ ಮಾಡುತ್ತಿದೆ ಎಂದರು.
ವಿವಿಧ ಬ್ಯಾಂಕ್ ನಿಂದ ಸಾಲ ಪಡೆದಿರುವ ಹಿನ್ನೆಲೆಯಲ್ಲಿ ಸುಸ್ತಿದಾರರ ಕಾಫಿ ತೋಟಗಳನ್ನು ಈ ಹರಾಜು ಮೂಲಕ ಮಾರಾಟ ಮಾಡಲು ಮುಂದಾಗಿರುವುದು ಸಣ್ಣ ಮತ್ತು ಮಧ್ಯಮ ವರ್ಗದ ಕಾಫಿ ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಆದ್ದರಿಂದ ಈ ಪ್ರಕರಣ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಈ ಗೊಂದಲ ಸಂಬಂಧ ಲೀಡ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರೆ ರಾಷ್ಟ್ರೀಕೃತ ಬ್ಯಾಂಕುಗಳ ವ್ಯವಸ್ಥಾಪಕರ ಸಭೆಯನ್ನು ಕರೆದು ಮಾಹಿತಿಯನ್ನು ಪಡೆಯಲಾಗುವುದು. ಯಾವುದೇ ಕಾರಣಕ್ಕೂ ಕಾಫಿ ತೋಟಗಳನ್ನು ಇ- ಹರಾಜು ಮಾಡದಂತೆ ಸೂಚನೆ ನೀಡಲಾಗುವುದು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಹಾಗೂ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಇತ್ತೀಚಿಗೆ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿಯೂ ಕಾಫಿ ಬೆಳೆಗಾರರ ಸಮಸ್ಯೆ ಬಗ್ಗೆ ಗಮನಕ್ಕೆ ತರಲಾಗಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೂಲಕ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಕಾಫಿ ಬೆಳಗಾರರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದು ಬ್ಯಾಂಕ್ ಸಾಲ ಮನ್ನಾ ಮಾಡಬೇಕೆಂದು ಕೂಡ ಒತ್ತಾಯಿಸಲಾಗುವುದು. ಸಾಲ ಪಡೆದಿರುವ ಕಾಫಿ ಬೆಳೆಗಾರರ ಮರುಪಾವತಿ ಅವಧಿ ವಿಸ್ತರಣೆಗೂ ಈ ವೇಳೆ ಕೋರಲಾಗುವುದು. ಯಾವುದೇ ಕಾರಣಕ್ಕೂ ಕಾಫಿ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಲು ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬಿ.ಎ. ಜಗನ್ನಾಥ್, ಲೋಕೇಶ್, ಕುಮಾರಸ್ವಾಮಿ ಉಪಸ್ಥಿತರಿದ್ದರು.ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾತನಾಡಿದರು.