ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಂತರ 2ನೇ ವರ್ಷದ ವಾರ್ಷಿಕ ಇ-ತ್ಯಾಜ್ಯ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತು.

ಕಾಪು: ಇಲ್ಲಿನ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಂತರ 2ನೇ ವರ್ಷದ ವಾರ್ಷಿಕ ಇ-ತ್ಯಾಜ್ಯ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತು.ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ಈ ಅಭಿಯಾನದಲ್ಲಿ ಸುಮಾರು 500 ಕೆಜಿಗೂ ಹೆಚ್ಚು ಇ - ತ್ಯಾಜ್ಯವನ್ನು ಸಂಗ್ರಹಿಸಿ, ಮಾನ್ಯತೆ ಪಡೆದ ಮರುಬಳಕೆಯ ಸಂಸ್ಥೆಗೆ ಹಸ್ತಾಂತರಿಸಿದ್ದು, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಿಲೇವಾರಿ ಕ್ರಮವನ್ನು ಕೈಗೊಂಡಿದೆ.ಅನಿಯಂತ್ರಿತ ಇ- ತ್ಯಾಜ್ಯ ವಿಲೇವಾರಿಯಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶಾಶ್ವತ ಪರಿಸರ ಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಅದರಂತೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕರು ಇ - ತ್ಯಾಜ್ಯ ಮರುಬಳಕೆಯ ವಿಧಾನಗಳು ಮತ್ತು ತ್ಯಾಜ್ಯವನ್ನು ಕಡಿಮೆ ಮಾಡುವ ಅಗತ್ಯತೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.