ಸಿಂದಗಿ ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ವಿವಿಧ ತಾಲೂಕುಗಳ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ 2026ರ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಸಿಂದಗಿ
ಸಿಂದಗಿ ಮತಕ್ಷೇತ್ರಕ್ಕೆ 3 ಕಿಮೀ ರಿಂಗ್ ರಸ್ತೆಗೆ ಶೀಘ್ರದಲ್ಲಿಯೇ ಅನುಮೋದನೆ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಸಿಂದಗಿ ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ವಿವಿಧ ತಾಲೂಕುಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ತಾಲೂಕು ಮಟ್ಟದ 2026ರ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಲಮಟ್ಟ ಹೆಚ್ಚಿಸಲು ಹಳ್ಳ-ಕೊಳ್ಳಗಳನ್ನು ತುಂಬಿಸುವ ಯೋಜನೆ ಇದೆ. ಶಾಸಕರು ನಾನು ಸೇರಿ ಸಿಎಂ ಜತೆ ಚರ್ಚೆ ಮಾಡಿ ನೀರು ತುಂಬಿಸುವ ಕಾರ್ಯ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಆದೇಶನ್ವಯ ಸಿಂದಗಿ ನಗರದ 842/2ರ ವಾಸವಾಗಿದ್ದ ನಿವಾಸಿಗಳ ಮನೆಗಳನ್ನು ನಗರಸಭೆ ತೆರವುಗೊಳಿಸಿತ್ತು. ಅಲ್ಲಿನ ಸಂತ್ರಸ್ತರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ವಿಶೇಷ ಪ್ರಸ್ತಾವನೆ ಸಲ್ಲಿಸಿ ಶೀಘ್ರದಲ್ಲಿ ನಿವೇಶನ ಒದಗಿಸಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಜಾಸೇವೆ ಇಲಾಖೆ ಪ್ರಾರಂಭ ಮಾಡಿದ್ದು, ಸರ್ಕಾರದ ಯೋಜನೆ ಮತ್ತು ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ದೂರುಗಳನ್ನು ವಿಳಂಬ ಮಾಡದೆ 21ದಿನಗಳ ಕಾಲಾವಧಿಯಲ್ಲಿ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕು. ಅಧಿಕಾರಿಗಳು ಮಾನವೀಯತೆಯಿಂದ ಸಮಸ್ಯೆ ಹೇಳಿಕೊಂಡು ಬರುವ ಜನರಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಸಲಹೆ ನೀಡಿದರು.
ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಿಎಂ ಡಿಕೆ ಶಿವಕುಮಾರ ಅವರ ಕನಸಿನ ಕೂಸಾದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಇಡೀ ರಾಜ್ಯದಲ್ಲಿಯೇ ಇದೊಂದು ಮಹತ್ವದ ಯೋಜನೆ. ಯರಗಲ್ ಬಿಕೆ ಜಿಪಂ ವ್ಯಾಪ್ತಿಯ 18 ಹಳ್ಳಿಗಳ ಸಮಸ್ಯೆಗಳನ್ನು ಆಲಿಸಿ 60-70 ಅರ್ಜಿ ಸ್ವೀಕರಿಸಿ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ಸಿಂದಗಿ ಮತಕ್ಷೇತ್ರದಲ್ಲಿ 270ಎ ಜಮೀನು ಇದೆ. ಅಲ್ಲೊಂದು ಬ್ರಹತ್ ಕೈಗಾರಿಕೊಧ್ಯಮ ಪ್ರಾರಂಭ ಮಾಡಿ ಸ್ಥಳೀಯ ಭಾಗದ ನೀರುದ್ಯೋಗ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದರು.ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಿಗಿ, ಜಿಪಂ ಸಿಇಒ ರಿಷಿ ಆನಂದ, ತಾಲೂಕು ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಸಂತೋಷ ಸಾಲಿ ವೇದಿಕೆಯ ಮೇಲಿದ್ದರು.