ಹಲ್ಲುಗಳ ರಕ್ಷಣೆಗೆ ಖನಿಜಯುಕ್ತ ಆಹಾರ ಸೇವಿಸಿ

| Published : Sep 13 2024, 01:32 AM IST

ಸಾರಾಂಶ

ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ.

ಕಂಪ್ಲಿ: ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪ್ಪು, ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ ಎಂದು ದಂತ ವೈದ್ಯ ಡಾ.ರಜತ ನಾಯ್ಡು ತಿಳಿಸಿದರು.

ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಜೆಸಿಐ ಕಂಪ್ಲಿ ಸೋನಾದ ವತಿಯಿಂದ ದಂತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಮಾಧಕ ವಸ್ತು ವಿರೋಧಿ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.ಪ್ರತಿಯೊಬ್ಬರು ಪ್ರತ್ಯೇಕ ಬ್ರಷ್‌ನಲ್ಲಿ ದಿನಕ್ಕೆ ಎರಡು ಬಾರಿ ಬೆಳಗ್ಗೆ ಮತ್ತು ರಾತ್ರಿ ತಪ್ಪದೇ ಹಲ್ಲು ಉಜ್ಜುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಯಾವುದೇ ಆಹಾರ ಪದಾರ್ಥ ಸೇವಿಸಿದ ಮೇಲೆ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಹಲ್ಲು ಉಜ್ಜುವಾಗ ವಸಡಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಬಳಿಕ ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಭರತ್ ಪದ್ಮಾಶಾಲಿ ಮಾತನಾಡಿ, ವಿಶ್ವದಾದ್ಯಂತ ಮಾದಕ ವಸ್ತುಗಳ ದುಶ್ಚಟಗಳಿಗೆ ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳ ಮಾರಾಟ, ಬಳಸುವಿಕೆ ತಡೆಯುವಲ್ಲಿ ಯುವಜನತೆಯು ಪ್ರಮುಖ ಪಾತ್ರ ವಹಿಸಿ, ಮಾದಕ ವಸ್ತುಗಳ ಮುಕ್ತ ಸಮಾಜ ನಿರ್ಮಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಕಂಪ್ಲಿ ಸೋನಾದ ಅಧ್ಯಕ್ಷ ಸುಹಾಸ್ ಚಿತ್ರಗಾರ್ ವಹಿಸಿದ್ದರು.

ಈ ಸಂದರ್ಭದಲ್ಲಿ ವಸತಿ ನಿಲಯದ ನಿಲಯ ಪಾಲಕರಾದ ವಿರೂಪಾಕ್ಷಪ್ಪ, ಜೆಸಿಐ ಕಂಪ್ಲಿ ಸೋನಾದ ಉಪಾಧ್ಯಕ್ಷ ಬಿ.ಎಚ್.ಎಂ. ಅಮರನಾಥ ಶಾಸ್ತ್ರಿ ಸೇರಿದಂತೆ ಇತರರಿದ್ದರು.