ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರು. ಪ್ರೋತ್ಸಾಹ ಧನ ನೀಡುತ್ತಿರುವುದು ರೈತರಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಸದೃಢವಾಗಿ ಉಳಿಯಬೇಕೆಂದರೆ ಉತ್ಪಾದಕರು ಸಂಘಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕು.
ಕನ್ನಡಪ್ರಭ ವಾರ್ತೆ ನಾಗಮಂಗಲ
ಗ್ರಾಮೀಣ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು ಎಂದು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.ತಾಲೂಕಿನ ಸಣ್ಣೇನಹಳ್ಳಿ ಹಾಗೂ ದಾಸರಹಳ್ಳಿ ಗ್ರಾಮದಲ್ಲಿ ಸ್ಥಾಪಿಸಿರುವ ನೂತನ ಡೈರಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ರೈತರಿಗೆ ಉಳಿದೆಲ್ಲಾ ಸಂಪನ್ಮೂಲಕ್ಕಿಂತ ಹೈನುಗಾರಿಕೆ ಆರ್ಥಿಕವಾಗಿ ಹೆಚ್ಚು ಶಕ್ತಿ ಕೊಡುತ್ತದೆ ಎಂದರು.
ರೈತರು ಕೃಷಿ ಜೊತೆಗೆ ಮಿಶ್ರತಳಿ ಹಸುಗಳನ್ನು ಸಾಕುವುದರಿಂದ ಕುಟುಂಬ ನಿರ್ವಹಣೆಗೆ ಹಣಕಾಸಿನ ನೆರವು ಸಿಕ್ಕಂತಾಗುತ್ತದೆ. ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರು. ಪ್ರೋತ್ಸಾಹ ಧನ ನೀಡುತ್ತಿರುವುದು ರೈತರಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಸದೃಢವಾಗಿ ಉಳಿಯಬೇಕೆಂದರೆ ಉತ್ಪಾದಕರು ಸಂಘಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕು ಎಂದರು.ಗ್ರಾಮೀಣ ರೈತರು ಉತ್ಪಾದಿಸುವ ಹಾಲನ್ನು ಸ್ಥಳೀಯವಾಗಿಯೇ ಶಿಥಿಲೀಕರಿಸಿ ಹಾಲಿನ ಗುಣಮಟ್ಟ ಕಾಪಾಡಲು ತಾಲೂಕಿನಲ್ಲಿ 50ಕ್ಕೂ ಹೆಚ್ಚು ಬಿಎಂಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಮತ್ತು ಜಿಲ್ಲಾ ಹಾಲು ಒಕ್ಕೂಟ ರೈತಪರವಾಗಿದೆ. ಹೈನುಗಾರಿಕೆಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಹಳ್ಳಿಗಾಡಿನ ಪ್ರತಿ ಕುಟುಂಬವೂ ಸಹ ಆರ್ಥಿಕ ಭದ್ರತೆಗಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಈ ವೇಳೆ ಮನ್ಮುಲ್ ನಿರ್ದೇಶಕ ಲಕ್ಷ್ಮಿನಾರಾಯಣ, ಬಿಂಡಿಗನವಿಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನೂತನ್ಗೌಡ, ಮುಖಂಡ ಸುನಿಲ್ ಲಕ್ಷ್ಮಿಕಾಂತ್ ಸೇರಿದಂತೆ ಮನ್ಮುಲ್ ನಾಗಮಂಗಲ ಉಪ ವಿಭಾಗದ ಅಧಿಕಾರಿಗಳು, ಸಣ್ಣೇನಹಳ್ಳಿ ಹಾಗೂ ದಾಸರಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯಕಾರಿ ಮಂಡಳಿ ನಿರ್ದೇಶಕರು, ಸದಸ್ಯರು ಇದ್ದರು.