ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಚಲುವರಾಯಸ್ವಾಮಿ ಸ್ವಾಮಿ
2 Min read
Author : KannadaprabhaNewsNetwork
Published : Nov 04 2023, 12:32 AM IST
Share this Article
FB
TW
Linkdin
Whatsapp
ಚಿತ್ರ : 3ಎಂಡಿಕೆ1 : ಕೂರ್ಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಆಯೋಜಿಸಿರುವ ಕೃಷಿ ಯಂತ್ರ ಮೇಳದ ಮಳಿಗೆ ವೀಕ್ಷಿಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ. | Kannada Prabha
Image Credit: KP
ಪೊನ್ನಂಪೇಟೆಯ ಕೂರ್ಗ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಮೂರು ದಿನಗಳ ಕೃಷಿ ಯಂತ್ರ ಮೇಳ
ಕನ್ನಡಪ್ರಭ ವಾರ್ತೆ ಮಡಿಕೇರಿ ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಪೊನ್ನಂಪೇಟೆಯ ಕೂರ್ಗ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಏರ್ಪಡಿಸಿರುವ ಮೂರು ದಿನಗಳ ಕೃಷಿ ಯಂತ್ರ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರು, ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆದ್ಯತೆ ಎಂದರು. ರಾಜ್ಯದ ಸರ್ಕಾರದ ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳನ್ನು ತೆರದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು. ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ಮೀಸಲಿರಿಸಲಾಗಿದ್ದು 70:30ರ ಸಹಾಯಧನ ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸಬಹುದಾಗಿದೆ ಎಂದು ಸಚಿವರು ಹೇಳಿದರು. ಕೂರ್ಗ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ವತಿಯಿಂದ ಖಾಸಗಿಯಾಗಿ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುತ್ತಿರುವುದು ಹಾಗೂ ಕೃಷಿಗೆ ಪೂರಕವಾದ ಯಂತ್ರ ಮೇಳ ಆಯೋಜಿಸಿರುವುದು ಅಭಿನಂದನಾರ್ಹ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ರೈತರ ಹಿತ ಕಾಯಲು ಬದ್ಧ: ಕಾವೇರಿ, ನಮ್ಮ ನಾಡಿನ ಜೀವನದಿ ಕೊಡಗಿನಲ್ಲಿ ಹುಟ್ಟಿ ರಾಜ್ಯದ ಕೋಟ್ಯಾಂತರ ಜನರ ಜೀವನಾಧಾರವಾಗಿ ಹರಿಯುತ್ತಿದೆ. ಈ ಬಾರಿ ಬರ ಪರಿಸ್ಥಿತಿ ತಲೆದೋರಿದ್ದು ನೀರಿನ ಹಂಚಿಕೆ ಸಮಸ್ಯೆಯೂ ಉದ್ಭವವಾಗಿದೆ. ಕೇಂದ್ರಕ್ಕೆ ಬೆಳೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಕೊಡಗು ವಿಭಿನ್ನ ಸಂಸ್ಕತಿ, ಸುಂದರ ಪ್ರಕೃತಿ ಹೊಂದಿರುವ ವೀರರ ನಾಡು, ಇಲ್ಲಿಗೆ ಭೇಟಿ ನೀಡುವುದೇ ಒಂದು ಸಂತೋಷ ಎಂದು ಅವರು ನುಡಿದರು. ರಾಜ್ಯದಲ್ಲಿ ನೂತನ ಸರ್ಕಾರದ ಬಂದು ನಾಲ್ಕು ತಿಂಗಳಲ್ಲಿ ನಾವು ನೀಡಿದ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ರೈತರಿಗೆ 5 ಲಕ್ಷ ರೂಗಳ ವರಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಸ್ತ್ರೀ ಶಕ್ತಿ,ಸ್ವಸಹಾಯ ಸಂಘಗಳಿಗೂ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ವಿವರಿಸಿದರು. ಗೃಹ ಲಕ್ಷಿ ಯೋಜನೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಹಾಗಾಗಿ ಪ್ರತಿ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋದವರನ್ನು ಗುರುತಿಸಿ ಸೌಲಭ್ಯ ಒದಗಿಸಲು ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿ.ಇ.ಒಗಳಿಗೆ ಸೂಚನೆ ನೀಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ್ಣ ಕೃಷಿಯ ಪ್ರಾಮುಖ್ಯತೆ, ತಂತ್ರಜ್ಞಾನ ಅಳವಡಿಕೆಯ ಲಾಭ, ರಾಜ್ಯ ಸರ್ಕಾರದ ಜನಪರ ಕಾಳಜಿ ಬಗ್ಗೆ ವಿವರಿಸಿದರು. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವರನ್ನು ಸನ್ಮಾನಿಸಲಾಯಿತು. ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಸಚಿವ ಭೇಟಿ ಮಡಿಕೇರಿ :ಪೊನ್ನಂಪೇಟೆಯ ಹುದ್ದೂರು ಗ್ರಾಮದಲ್ಲಿ ಕೃಷಿ ಪ್ರಶಸ್ತಿ ವಿಜೇತ ರವಿಶಂಕರ್ ಅವರ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ ವಿವಿಧ ತಳಿಯ ಭತ್ತದ ಬೆಳೆ ವೀಕ್ಷಿಸಿದರು. ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಿಗೆ ಆದ್ಯತೆ ಸಿಗುತ್ತಿರುವಾಗ ವಿವಿಧ ತಳಿಗಳ ಭತ್ತ ಬೆಳೆಯುತ್ತಿರುವ ರವಿಶಂಕರ್ ಮತ್ತು ಅವರ ಸಹೋದರರ ಕಾಳಜಿ ಬಗ್ಗೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ, ಕೃಷಿ ನಿರ್ದೇಶಕ ಡಾ. ಜಿ.ಟಿ.ಪುತ್ರ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.