ಹೊಸಕೋಟೆ: ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧ್ಯ ಎಂಬ ಡಾ.ಅಂಬೇಡ್ಕರ್ ಆಶಯಗಳನ್ನು ಸಾಕಾರಗೊಳಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು
ಹೊಸಕೋಟೆ: ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕವೇ ಸಮಾಜದ ಅಭಿವೃದ್ಧಿ ಸಾಧ್ಯ ಎಂಬ ಡಾ.ಅಂಬೇಡ್ಕರ್ ಆಶಯಗಳನ್ನು ಸಾಕಾರಗೊಳಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದಲ್ಲಿ ಸ್ನೇಹ ಪರಿಶಿಷ್ಟ ಜಾತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ ಹಾಗೂ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಶ್ರೇಷ್ಠ ಅರ್ಥಶಾಸ್ತ್ರಜ್ಞರೂ ಆಗಿದ್ದರು. ದೇಶದ ಹಣಕಾಸು ವ್ಯವಸ್ಥೆ ಹಾಗೂ ರುಪಾಯಿ ಮೌಲ್ಯ ಕುರಿತು ಅವರು ನೀಡಿರುವ ಚಿಂತನೆಗಳು ಇಂದಿಗೂ ಪ್ರಸ್ತುತ. ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯಿಂದ ಸಮ ಸಮಾಜ ನಿರ್ಮಾಣ ಸಾಧ್ಯ. ವಿದ್ಯಾರ್ಥಿಗಳು ಹಾಗೂ ಬಡವರಿಗೆ ನೆರವಾಗುತ್ತಿರುವ ಸ್ನೇಹ ಪರಿಶಿಷ್ಟ ಜಾತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಾರ್ಯ ಶ್ಲಾಘನೀಯ ಎಂದರು.ಸಂಘದ ಅಧ್ಯಕ್ಷ ಲಘುಮಯ್ಯ ಮಾತನಾಡಿ, "ಪೇ ಬ್ಯಾಕ್ ಟು ಸೊಸೈಟಿ " ಧ್ಯೇಯದೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಕಳೆದ ಸಾಲಿನಲ್ಲಿ ಸಂಸ್ಥೆ 2.13 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಅದನ್ನು ಸಮಾಜದ ಅಭಿವೃದ್ಧಿಗೆ ಬಳಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ, ಮಹಿಳೆಯರು, ಗೃಹ ಕೈಗಾರಿಕೆಗಳು, ಸ್ವಯಂ ಉದ್ಯೋಗಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.
ಸಂಘದ ಉಪಾಧ್ಯಕ್ಷ ಜಯರಾಮುಡು, ಬಿಎಂಆರ್ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಎಚ್.ಎಂ.ಸುಬ್ಬರಾಜು, ಟೌನ್ ಅಧ್ಯಕ್ಷ ಬಿವಿ.ಬೈರೇಗೌಡ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ಕೂರು ಮುನಿರಾಜು, ಕಾಂಗ್ರೆಸ್ ಮುಖಂಡ ಪ್ರಕಾಶ್, ಉದ್ಯಮಿ ಸುಭಾಷ್ಗೌಡ, ಗುಟ್ಟಹಳ್ಳಿ ನಾಗರಾಜ್ ಹಾಜರಿದ್ದರು.ಫೋಟೋ: 27 ಹೆಚ್ಎಸ್ಕೆ 1
ಹೊಸಕೋಟೆಯಲ್ಲಿ ಸ್ನೇಹ ಪರಿಶಿಷ್ಟ ಜಾತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ ಹಾಗೂ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯರನ್ನು ಶಾಸಕ ಶರತ್ ಬಚ್ಚೇಗೌಡ ಸನ್ಮಾನಿಸಿದರು.