ಸಾರಾಂಶ
ಚಳ್ಳಕೆರೆ ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದಕ್ಷಿಣ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಬಿಇಒ ಕೆ.ಎಸ್.ಸುರೇಶ್ ಉದ್ಘಾಟಿಸಿದರು.
ದಕ್ಷಿಣ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದಲ್ಲಿ ಕೆ.ಎಸ್.ಸುರೇಶ್ ಅಭಿಮತ ಕನ್ನಡಪ್ರಭ ವಾರ್ತೆ ಚಳ್ಳಕೆರೆ:
ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಬುದ್ಧಿಕ ಕೌಶಲ್ಯ ಹೆಚ್ಚಿಸಲು ಶಿಕ್ಷಣ ಇಲಾಖೆ ಕಲಿಕಾ ಹಬ್ಬದ ಮೂಲಕ ವಿಶೇಷ ಜಾಗೃತಿಯನ್ನುಂಟು ಮಾಡುತ್ತಿದೆ. ಕಲಿಕಾ ಹಬ್ಬ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗ ಕಲ್ಪಿಸಬಹುದಾಗಿದೆ. ನುರಿತ ಶಿಕ್ಷಕರು ಕಲಿಕಾ ಹಬ್ಬವನ್ನು ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮುಂದುವರೆಸಿದ್ದಾರೆ. ವಿದ್ಯಾರ್ಥಿಗಳೂ ಸಹ ಶಿಕ್ಷಣ ಇಲಾಖೆಯ ಗೌರವವನ್ನು ಎತ್ತಿಹಿಡಿಯಲು ಹೆಚ್ಚು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದರು.ಗಾಂಧಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದಕ್ಷಿಣ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಗಿಡಕ್ಕೆನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಚಳ್ಳಕೆರೆ ತಾಲೂಕಿನಾದ್ಯಂತ ಶಿಕ್ಷಣ ಇಲಾಖೆ ಕಲಿಕಾ ಹಬ್ಬವನ್ನು ಎಲ್ಲಾ ಕ್ಲಸ್ಟರ್ ವಿಭಾಗದಲ್ಲಿ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳೂ ಸಹ ಶಿಕ್ಷಕರು ನೀಡುವ ಶಿಕ್ಷಣ ಬಗ್ಗೆ ಜಾಗೃತರಾಗಿರಬೇಕು ಶಿಕ್ಷಣ ಇಲಾಖೆ ಇಂದು ಅನೇಕ ಸಮಸ್ಯೆಗಳ ನಡುವೆಯೂ ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವ ವ್ಯವಸ್ಥೆ ಮಾಡಲಾಗುತ್ತಿದೆ. ನೂತನ ತಾಂತ್ರಿಕತೆಯ ಶಿಕ್ಷಣದಿಂದ ವಿದ್ಯಾರ್ಥಿಗಳು ಇನ್ನೂ ಹೆಚ್ಚು ಪರಿಣಿತಿ ಪಡೆಯುವಂತಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿಆರ್ಪಿ ಮಹಂತೇಶ್, ಬಿ.ಈ.ಮಂಜುನಾಥ, ಮುಖ್ಯ ಶಿಕ್ಷಕಿ ಪದ್ಮಾವತಿ, ಜಯಮ್ಮ, ಶಾಲೆಯ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.