ಕನ್ನಡಪ್ರಭ ವಾರ್ತೆ ಹಾಸನ

ಶಿಕ್ಷಣ ಎಂಬುದು ವ್ಯಕ್ತಿಯ ಜೀವನವನ್ನು ರೂಪಿಸುವ ಅತ್ಯಂತ ಪ್ರಮುಖ ಅಸ್ತçವಾಗಿದ್ದು, ಜ್ಞಾನಾರ್ಜನೆಗೆ ಆಸಕ್ತಿ ಮತ್ತು ಛಲ ಇದ್ದರೆ ಅವರು ಉನ್ನತ ಸಾಧನೆ ಮಾಡಬಹುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಅಭಿಪ್ರಾಯಪಟ್ಟರು.ನಗರದ ಹಾಸನಾಂಬಾ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಹಾಸನ ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ 8ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿದ ಜಿಪಂ ಸಿಇಒ ಶುಭಂ ಶುಕ್ಲ ಅವರು ಮಾತನಾಡಿ, ಸರ್ಕಾರಿ ನೌಕರರ ಜವಾಬ್ದಾರಿ ಕೇವಲ ಕಚೇರಿ ಸಮಯಕ್ಕೆ ಸೀಮಿತವಾಗಿರುವುದಿಲ್ಲ. ಜನಸೇವೆಯೇ ಅವರ ಪ್ರಮುಖ ಧ್ಯೇಯವಾಗಿದ್ದು, ದಿನದ ಇಪ್ಪತ್ತನಾಲ್ಕು ಗಂಟೆಯೂ ಸಾರ್ವಜನಿಕರ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕಾದ ಹೊಣೆಗಾರಿಕೆ ಅವರ ಮೇಲಿದೆ. ಇಂತಹ ಸೇವಾ ಮನೋಭಾವದ ನಡುವೆ ಭಾನುವಾರದಂತಹ ರಜಾದಿನದಲ್ಲಿಯೂ ಸಂಘದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಈ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ಸಂತಸದ ವಿಚಾರ. ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯದಿಂದ ಸಮಾಜದಲ್ಲಿ ಉತ್ತಮ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಾಧ್ಯವಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುವ ಗೌರವವು ಇತರ ಮಕ್ಕಳಿಗೂ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದರು. ರಾಜ್ಯಾದ್ಯಂತ ನಡೆಯುತ್ತಿರುವ ಸಾಕ್ಷರತಾ ಪರೀಕ್ಷೆಯ ಕುರಿತು ಉಲ್ಲೇಖಿಸಿದ ಅವರು, ಬಾಲ್ಯದಲ್ಲಿ ಶಿಕ್ಷಣದಿಂದ ವAಚಿತರಾದ ವಯಸ್ಕರಿಗೆ ಮತ್ತೊಮ್ಮೆ ಕಲಿಯುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಹಾಸನ ಜಿಲ್ಲೆಯಲ್ಲಿಯೇ 300ಕ್ಕೂ ಹೆಚ್ಚು ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವುದು ಶಿಕ್ಷಣದ ಮಹತ್ವವನ್ನು ಸಾರುತ್ತದೆ ಎಂದು ಹೇಳಿದರು.

ಶಿಕ್ಷಣ ಮತ್ತು ಪುಸ್ತಕಗಳೊಂದಿಗೆ ನಿಕಟ ಸಂಬಂಧ ಬೆಳೆಸಿಕೊಂಡರೆ ವ್ಯಕ್ತಿಯ ಭವಿಷ್ಯ ಉಜ್ವಲವಾಗುತ್ತದೆ. ನಿರಂತರ ಅಧ್ಯಯನ ಮತ್ತು ಪರಿಶ್ರಮದಿಂದ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಬಹುದಾಗಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಕ್ರೀಡೆ, ಸಾಂಸ್ಕöÈತಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಸರ್ಕಾರಿ ನೌಕರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಬಳಿಕ ನಡೆದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಕಳೆದ ಸಾಲಿನ ಆಡಳಿತ ಮಂಡಳಿಯ ಕಾರ್ಯಚಟುವಟಿಕೆಗಳು, ಸಂಘದ ಅಭಿವೃದ್ಧಿ ಯೋಜನೆಗಳು ಹಾಗೂ ಸದಸ್ಯರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ವಿವಿಧ ಕಾರ್ಯಕ್ರಮಗಳ ಕುರಿತು ಸವಿಸ್ತಾರ ಮಾಹಿತಿ ನೀಡಲಾಯಿತು. ವಾರ್ಷಿಕ ವರದಿ, ಜಮಾ- ಖರ್ಚು ವಿವರ, ಲಾಭ-ನಷ್ಟ ಪತ್ರಿಕೆ, ಆಸ್ತಿ-ಜವಾಬ್ದಾರಿ ವಿವರಗಳು ಹಾಗೂ ಲೆಕ್ಕಪತ್ರಗಳನ್ನು ಸದಸ್ಯರ ಮುಂದಿಟ್ಟು ಅನುಮೋದನೆ ಪಡೆಯಲಾಯಿತು. ಮುಂದಿನ ಸಾಲಿನ ಲೆಕ್ಕ ಪರಿಶೀಲನೆಗಾಗಿ ಚಾರ್ಟೆಡ್ ಅಕೌಂಟೆಡ್‌ ನೇಮಕ, ಸದಸ್ಯರಿಗೆ ಮತ್ತಷ್ಟು ಸೌಲಭ್ಯಗಳನ್ನು ವಿಸ್ತರಿಸುವುದು, ಗೃಹ ನಿರ್ಮಾಣ


ಯೋಜನೆಗಳಿಗೆ ವೇಗ ನೀಡುವುದು ಹಾಗೂ ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಸದಸ್ಯರು ಚರ್ಚಿಸಿ ನಿರ್ಣಯಗಳನ್ನು ಕೈಗೊಂಡರು.

ಈ ಸಂದರ್ಭದಲ್ಲಿ ಗುಣನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಘದ ಜಿಲ್ಲಾಧ್ಯಕ್ಷ ಕೆ.ಎಂ. ಶ್ರೀನಿವಾಸ್ ಪ್ರಾಸ್ತಾವಿಕ ನುಡಿ ಮಾತನಾಡಿದರು. ಸಮಾಜಸೇವಕ ಡಾ. ರಾಹುಲ್ ದೇವರಾಜು, ವೆಲ್‌ಫೇರ್‌ ಅಸೋಸಿಯೇಷನ್‌ನ ಮಂಜುನಾಥ್ ಕಾಳಿಂಗಪ್ಪ, ಜಿಲ್ಲೆಯ ಯುಪಿಎಸ್ ಸಾಧಕ ಎ.ಎಂ. ಶಶಿಮೋಹನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿ ಎಸ್. ಮಧು, ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಗೌರವಾಧ್ಯಕ್ಷ ಜಿ.ಪಿ. ವಿಶ್ವನಾಥ್, ಉಪಾಧ್ಯಕ್ಷ ಬಿ.ಆರ್‌. ಧರ್ಮ, ಗೌರವಾಧ್ಯಕ್ಷೆ ಕೆ.ಜೆ. ಸಾವಿತ್ರಮ್ಮ, ಉಪಾಧ್ಯಕ್ಷ ಎನ್.ಎಸ್. ಲೋಕೇಶ್ ಕುಮಾರ್‌, ಗೌರವ ಕಾರ್ಯದರ್ಶಿ ಸತೀಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.