ಸಾರಾಂಶ
ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿನ ಸಂಬಂಧ ಕಾನೂನು ಇಲಾಖೆ ಸಲಹೆ ಪಡೆದು ಮುಂದೇನು ಮಾಡಬೇಕೆಂದು ನಿರ್ಧರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.
ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ತೀರ್ಪು ಹಾಗೂ ಈ ತರಗತಿ ಮಕ್ಕಳಿಗೆ ಪರೀಕ್ಷೆ, ಮೌಲ್ಯಾಂಕನ ನಡೆಸಿದ ಬಳಿಕ ಸೋಮವಾರವಷ್ಟೆ ಪ್ರಕಟಿಸಿರುವ ಫಲಿತಾಂಶಕ್ಕೆ ಸುಪ್ರಿಂಕೋರ್ಟ್ ತಡೆ ನೀಡಿ ಸೋಮವಾರ ಮಧ್ಯಂತರ ಆದೇಶ ನೀಡಿದೆ. ಜೊತೆಗೆ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಆಗುವ ಗೊಂದಲ ನಿವಾರಣೆಗೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಇದರಿಂದ ಬೋರ್ಡ್ ಪರೀಕ್ಷೆ ವಿಚಾರದಲ್ಲಿ ಇಲಾಖೆಯ ನಡೆಗೆ ಹಿನ್ನಡೆಯಾದಂತಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದೇನು ಮಾಡಬೇಕೆಂದು ತಿಳಿಯದೆ ಗೊಂದಲಕ್ಕೆ ಸಿಲುಕಿದ್ದಾರೆ.
ಈ ಸಂಬಂಧ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶದ ವಿಚಾರದಲ್ಲಿ ಇಲಾಖೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗುವುದಿಲ್ಲ. ಕಾನೂನು ಇಲಾಖೆಯ ಸಲಹೆ ಪಡೆದು ಮುಂದುವರೆಯಬೇಕಾಗುತ್ತದೆ. ಈಗಾಗಲೇ ಪರೀಕ್ಷೆ ಮುಗಿದು, ಸೋಮವಾರ ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಮಂಗಳವಾರದಿಂದ ಬೇಸಿಗೆ ರಜೆ ಶುರುವಾಗಲಿದೆ. ಈ ಎಲ್ಲ ಅಂಶಗಳನ್ನೂ ರಾಜ್ಯ ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ಅವರ ಸಲಹೆಯಂತೆ ಮುಂದಿನ ಹೆಜ್ಜೆ ಇಡಬೇಕಾಗುತ್ತದೆ. ಅದರಂತೆ ನಡೆಯುತ್ತೇವೆ ಎಂದು ಹೇಳಿದರು.