ಚಿತ್ರದುರ್ಗದ ರೋಟರಿ ಬಾಲಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯಲ್ಲಿ ಸಂಸದ ಗೋವಿಂದ ಕಾರಜೋಳ ಬಾಲಕಾರ್ಮಿಕರ ಜಾಗೃತಿ ಮೂಡಿಸುವ ಬಿತ್ತಿಪತ್ರ ಬಿಡುಗಡೆ ಮಾಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಸಮರ್ಪಕ ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿ ಹೊಂದುವಂತೆ ಸಂಸದ ಗೋವಿಂದ ಎಂ. ಕಾರಜೋಳ ಸಲಹೆ ನೀಡಿದರು.ನಗರದ ರೋಟರಿ ಬಾಲಭವನದಲ್ಲಿ ಮಂಗಳವಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 17ನೇ ವರ್ಷದ ಕಟ್ಟಡ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಲಿಂಗಭೇಧ ಇಲ್ಲದೆ ಎಲ್ಲರಿಗೂ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಿದ್ದಾರೆ. ಆದರೆ ಅವುಗಳನ್ನು ಪಡೆಯುವಲ್ಲಿ ಕಾರ್ಮಿಕರು ಹಿಂದೆ ಬೀಳುತ್ತಿದ್ದಾರೆ. ಇವರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಅರ್ಜಿಯನ್ನು ಎಲ್ಲಿ ಹಾಕಬೇಕು ಎಂಬುದು ಗೊತ್ತಿರುವುದಿಲ್ಲ. ಹಾಗಾಗಿ ಸರ್ಕಾರ ಯೋಜನೆಗಳನ್ನು ಪಡೆದವರೇ ಮತ್ತೆ ಪಡೆಯುತ್ತಿದ್ದಾರೆ ಎಂದು ವಿಷಾಧಿಸಿದರು.
ಕಟ್ಟಡ ಕಾರ್ಮಿಕರು ಕೆಲಸದ ಮೇಲೆ ಬೇರೆ ಕಡೆ ಹೋಗುವ ಅನಿವಾರ್ಯತೆ ಬರುತ್ತದೆ. ಈ ಸಮಯದಲ್ಲಿ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಸರ್ಕಾರದ ವತಿಯಿಂದ ನಿರ್ಮಾಣ ಮಾಡಲಾದ ವಸತಿ ನಿಲಯಗಳಲ್ಲಿ ನಿಮ್ಮ ಮಕ್ಕಳನ್ನು ಸೇರಿಸುವುದರ ಮೂಲಕವಿದ್ಯಾಭ್ಯಾಸ ಸುಗಮವಾಗಿ ಸಾಗುವಂತೆ ಮಾಡಬೇಕಾದ ಹೊಣೆಗಾರಿಕೆ ಪಾಲಕರ ಮೇಲಿದೆ. ಹಿಂದೆ ತಾವು ಸಮಾಜ ಕಲ್ಯಾಣ ಮಂತ್ರಿಯಾಗಿದ್ದಾಗ ರಾಜ್ಯದಲ್ಲಿ 200ಕ್ಕೂ ಹೆಚ್ಚು ಹಾಸ್ಟಲ್ಗಳನ್ನು ತಲಾ 25 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿದ್ದೆ. ಸರ್ಕಾರದ ವಸತಿ ನಿಲಯಗಳಲ್ಲಿ ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ ಎಂದರು.ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ ಮಾತನಾಡಿ, ಹಗಲಿರುಳು ದುಡಿಯುವ ಕಾರ್ಮಿಕ ವರ್ಗದವರಿಗೆ ಸರ್ಕಾರ ವಿವಿಧ ರೀತಿಯ ಯೋಜನೆಯನ್ನು ಜಾರಿ ಮಾಡಿದೆ. ನಿಮ್ಮ ಸಂಘದ ಮೂಲಕವಾಗಲಿ, ವೈಯಕ್ತಿಕವಾಗಲಿ ಅರ್ಜಿ ಸಲ್ಲಿಸುವುದರ ಮೂಲಕ ಸರ್ಕಾರದ ಸೌಲಭ್ಯವನ್ನು ಪಡೆಯಬೇಕು. ಕಾರ್ಮಿಕ ಕಾರ್ಡ್ ಪಡೆದು ನೋಂದಣಿ ಮಾಡಿಸಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಸರ್ಕಾರ ಕಾರ್ಮಿಕರಿಗೆ ತುಂಬಾ ಅನ್ಯಾಯವನ್ನು ಮಾಡುತ್ತಿದೆ. ಮಕ್ಕಳ ಶಿಕ್ಷಣಕ್ಕಾಗಿ ನೀಡುತ್ತಿದ್ದ ಶಿಷ್ಯ ವೇತನದಲ್ಲಿ ಕಡಿತ ಮಾಡಲಾಗಿದೆ. ಕಾರ್ಮಿಕ ಮಂಡಳಿಯಲ್ಲಿ ಹೇರಳವಾಗಿ ಹಣ ಇತ್ತು. ಇಂದಿನ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ನಮೆಗ ನೀಡುವ ಸೌಲಭ್ಯಗಳಲ್ಲಿ ವಂಚನೆ ಮಾಡಲಾಗುತ್ತಿದೆ ಎಂದು ದೂರಿದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್ವರಪ್ಪ, ಆರ್ಕಿಟೆಕ್ಟರ್ ಸಿವಿಲ್ ಎಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್.ಪ್ರಸಾದ್, ಚಿತ್ರದುರ್ಗ ಜಿಲ್ಲಾ ಸ್ಟೀಲ್ ವೆಲ್ಟಿಂಗ್ ಇಂಡಸ್ಟ್ರಯಲ್ಸ್ ಕಾರ್ಮಿಕದ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಗೌರವಾಧ್ಯಕ್ಷ ಹಾಲೇಶಪ್ಪ, ನ್ಯಾಯವಾದಿಗಳಾದ ಜಗದೀಶ್ ಗುಂಡೇರಿ, ಶಿವಮೂರ್ತಿ, ದ್ವಿಚಕ್ರ ವಾಹನ ಮೆಕಾನಿಕ್ ಸಂಘದ ಉಪಾಧ್ಯಕ್ಷಧ ಅಣ್ಣೇಶ್, ಅಂಜಿನಪ್ಪ ಇದ್ದರು.