ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದೆಯಾಗಿ ಒಂದು ವರ್ಷ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದೆ. ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಭರವಸೆ ನೀಡಿದರು.ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಎಸಿಪಿ, ಟಿಎಸ್ಪಿ ಯೋಜನೆಯಡಿ ಎಸ್ಸಿ ಕಾಲೋನಿಯಲ್ಲಿ ಸುಮಾರು ₹8 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಬೆಳೆಯಬೇಕೆಂಬ ಉದ್ಧೇಶದಿಂದ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದರು.ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಾಣವಾದರೇ ಕ್ರೀಡಾಪಟುಗಳು ರಾಷ್ಟ್ರೀಯ-ಅಂತಾರಾಷ್ಟ್ರೀಯಮಟ್ಟದಲ್ಲಿ ಮಿಂಚಲು ಅನುಕೂಲವಾಗಲಿದೆ. ಹಿರಿಯರ ಮಾರ್ಗದರ್ಶನ ಪಡೆದು, ಕ್ರೀಡೆಗೆ ಬೇಕಾಗುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮತದಾರರ ಆಶೀರ್ವಾದಿಂದ ಮೊದಲ ಸಲ ಚಿಕ್ಕೋಡಿ ಕ್ಷೇತ್ರದಿಂದ ಸಂಸದೆಯಾಗಿರುವೆ. ಈ ಭಾಗದ ಮನೆ ಮಗಳಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಹೀಗಾಗಿ ಕ್ರೀಡಾ, ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಪಡಿಸಲು ನಿರಂತರ ಶ್ರಮಿಸಲಾಗುವುದು ಎಂದು ತಿಳಿಸಿದರು.ರಾಯಬಾಗ ವಿಧಾನಸಭಾ ಕ್ಷೇತ್ರದ ನಸಲಾಪುರ, ಬಾವನ-ಸವದತ್ತಿ, ನಸಲಾಪೂರ, ಕರೋಶಿ ಬಂಬಲವಾಡ ಗ್ರಾಮಗಳಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ನಿರ್ಮಾಣಕ್ಕೆ ತಲಾ ₹1 ಕೋಟಿ ವೆಚ್ಚದ ಕಾಮಗಾರಿಗಳಿಗೆ ಹಾಗೂ ₹3 ಕೋಟಿ ವೆಚ್ಚದಲ್ಲಿ ಬಂಬಲವಾಡದಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿವರೆಗೆ ಕುಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೋಹಿತೆ, ಮುಖಂಡರಾದ ರಾಮಪ್ಪ ಪೂಜಾರಿ, ಸುರೇಶ ಶಾಮ್ ರೇವಡೆ, ಶಂಕರಗೌಡ ಪಾಟೀಲ, ವೃಷಭ ಪಾಟೀಲ, ವಿನಯ ಕುಂಬಾರ, ರುದ್ರಪ್ಪ ಸಂಗಪ್ಪಗೊಳ, ರಾಜು ಕೊಟ್ಟಿಗೆ, ಅರುಣ ನರಗುಂದೆ, ಶಿವು ಪಾಟೀಲ, ಕೃಷ್ಣ ಜುಗಳೆ, ಸಂಜಯ ಕಾಂಬ್ಳೆ, ಚೇತನ್ ಹೊನ್ನಗೊಳ ಹಾಗೂನ ಗ್ರಾಮಸ್ಥರು ಇತರರು ಇದ್ದರು.