ಸಾರಾಂಶ
ಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ತಾಲೂಕಿನ ವಯೋವೃದ್ಧರು, ವಿಧವೆಯರು ಸೇರಿದಂತೆ ಅಶಕ್ತರ ಮನೆಯ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.ತಾಲೂಕು ಆಡಳಿತದಿಂದ ವಾಟದಹೊಸಹಳ್ಳಿ ಹಾಗೂ ಡಿ.ಪಾಳ್ಯ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಕಚೇರಿಗೆ ಅಲೆದಾಡಿಸಬೇಡಿಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಕೆಲಸವನ್ನು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು. ತಹಸೀಲ್ದಾರ್ ಮಹೇಶ್ ಎಸ್.ಪತ್ರಿ ಮಾತನಾಡಿ, ಅರ್ಹರ ಮನೆ ಬಾಗಿಲಿಗೆ ಖಾತೆ ಹಾಗೂ ಪಿಂಚಣಿ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಈಗಾಗಲೆ ತಾಲೂಕು ಆಡಳಿತ ಮಾಡುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಕಂದಾಯ ಹಾಗೂ ಪಿಂಚಣಿ ಅದಾಲತ್ ನಡೆಸುವುದರಿಂದ ಸ್ಥಳೀಯರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.ರೈತಸಂಪರ್ಕ ಕೇಂದ್ರ
ಜಿ.ಪಂ.ಮಾಜಿ ಅಧ್ಯಕ್ಷ ಪಿವಿ.ರಾಘವೇಂದ್ರ ಹನುಮಾನ್ ಮಾತನಾಡಿ, ತಾಲೂಕು ಆಡಳಿತ ಉತ್ತಮವಾಗಿ ಕೆಲಸ ಮಾಡುತ್ತಿದೆ. ಈ ಭಾಗದಲ್ಲಿ ನೂತನ ರೈತ ಸಂಪರ್ಕ ಕೇಂದ್ರವನ್ನು ಪ್ರಾರಂಭಿಸಿರುವುದರಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಡಿ.ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು, ಕೆ.ಎಚ್.ಪಿ.ಬಣದ ಮುಖಂಡರು, ಸಾರ್ವಜನಿಕರು ಇದ್ದರು.