ಸಾರಾಂಶ
ಎಂ.ಜಿ.ಎಂ. ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಸಮಾಜದಲ್ಲಿ ಹಿರಿಯರಿಗೆ ಗೌರವಯುತ ಹಾಗೂ ಪೂಜನೀಯ ಸ್ಥಾನವಿದ್ದು, ಅವರನ್ನು ಪ್ರೀತಿ, ಸಹಾನುಭೂತಿಯಿಂದ ಕಾಣಬೇಕು. ಅವರ ಆರೈಕೆಯನ್ನು ಹೃದಯದಿಂದ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಹೇಳಿದರು.ಅವರು ಇಲ್ಲಿನ ಎಂ.ಜಿ.ಎಂ. ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಸರ್ಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ. ನ್ಯಾಯಾಲಯಗಳ ಪ್ರಕರಣಗಳಲ್ಲಿ ಸಹ ಅವರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಹಿರಿಯರು ಅವುಗಳ ಪ್ರಯೋಜನವನ್ನು ಪಡೆಯಬೇಕು ಎಂದರು.ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರಿಕರು ಯಾರ ಮೇಲೂ ಅವಲಂಭಿತವಾಗದೇ ಸ್ವತಂತ್ರವಾಗಿ ಜೀವನ ನಡೆಸಲು ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹಿರಿಯ ನಾಗರಿಕರು ತಮ್ಮ ಕೆಲಸದ ನಿಮಿತ್ತ ಸರ್ಕಾರಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಗೌರವ ನೀಡಿ, ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು ಹಿರಿಯ ನಾಗರಿಕರು ಗುರುತಿನ ಚೀಟಿ ಪಡೆಯದೇ ಇದ್ದಲ್ಲಿ ಈ ಕೂಡಲೇ ಪಡೆಯುವಂತೆ ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ್, ಪಪೂ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ., ಉಡುಪಿ ವಕೀಲರ ಸಂಘ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಕೆನರಾ ಬ್ಯಾಂಕ್ ರೀಜನಲ್ ಮ್ಯಾನೇಜರ್ ಕಾರ್ತಿಕೇಯನ್ ಮತ್ತಿತರರು ಉಪಸ್ಥಿತರಿದ್ದರು.ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಚ್. ವಿಶ್ವನಾಥ್ ಸ್ವಾಗತಿಸಿದರು. ಡಾ, ಗಣನಾಥ್ ಎಕ್ಕಾರು ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಧಿಕಾರಿ ರತ್ನಾ ವಂದಿಸಿದರು.
ಈ ಸಂದರ್ಭ ಹಿರಿಯ ನಾಗರಿಕರ ಆರೋಗ್ಯ ತಪಾನಣೆಯನ್ನು ನಡೆಸಲಾಯಿತು. ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮನು ಹಂದಾಡಿ ಅವರಿಂದ ನಕ್ಕು ನಲಿ ವಿಶೇಷ ಕಾರ್ಯಕ್ರಮ ನಡೆಯಿತು.