ಮಂಗನ ಕಾಯಿಲೆಗೆ ವೃದ್ಧ ಬಲಿ

| Published : Mar 05 2024, 01:32 AM IST

ಸಾರಾಂಶ

ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆಗೆ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ವೃದ್ಧರೊಬ್ಬರು ತುತ್ತಾಗಿ ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಾಳೆಹೊನ್ನೂರು: ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆಗೆ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ವೃದ್ಧರೊಬ್ಬರು ತುತ್ತಾಗಿ ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೇಲ್ಪಾಲ್ ಗ್ರಾಮದ ಬಸವಪೂಜಾರಿ (71) ಮಂಗನ ಖಾಯಿಲೆಗೆ ಬಲಿಯಾದ ವ್ಯಕ್ತಿ. ಇವರಿಗೆ ಕಳೆದ ಹನ್ನೆರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ ಬಂದಿದ್ದರು. ಒಂದೆರಡು ದಿನ ಕಳೆದರೂ ಜ್ವರ ಕಡಿಮೆಯಾಗದ ಕಾರಣ ತೀರ್ಥಹಳ್ಳಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅಲ್ಲಿಯೂ ಸಹ ಜ್ವರ ಗುಣಮುಖವಾಗದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮಣಿಪಾಲದಲ್ಲಿ ಮಂಗನಕಾಯಿಲೆ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಭಾನುವಾರ ರಾತ್ರಿ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಈ ಭಾಗದಲ್ಲಿ ಮಂಗನಕಾಯಿಲೆಗೆ ಇದೇ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಮೃತರಿಗೆ ಪತ್ನಿ, ಓರ್ವ ಪುತ್ರಿ, ಮೂವರು ಪುತ್ರರು ಇದ್ದಾರೆ. ಮೃತರು ಮೇಲ್ಪಾಲ್‌ನ ಶ್ರೀ ಚೌಡೇಶ್ವರಿ, ಜಟಿಗೇಶ್ವರ ದೇವಸ್ಥಾನದ ಉಪಾಧ್ಯಕ್ಷರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಮೃತರ ಅಂತ್ಯಕ್ರಿಯೆ ಸೋಮವಾರ ಮೇಲ್ಪಾಲ್‌ನಲ್ಲಿ ನಡೆಯಿತು.೦೪ಬಿಹೆಚ್‌ಆರ್ ೪: ಬಸವಪೂಜಾರಿ