ದೊಡ್ಡಬಳ್ಳಾಪುರ: ವಿದ್ಯುತ್ ಕ್ಷೇತ್ರ ಖಾಸಗೀಕರಣ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಇದರ ವಿರುದ್ಧ ಮಹಾಲಿಂಗಪುರದಲ್ಲಿ ನಡೆಯುತ್ತಿದ್ದ ಹೋರಾಟದ ವೇಳೆ ನೇಕಾರ ಮುಖಂಡರ ಮೇಲೆ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಕ್ಷೇತ್ರ ಖಾಸಗೀಕರಣವಾದರೆ ನೇಕಾರರಿಗೆ ಈಗ ಬರುತ್ತಿರುವ ಸಹಾಯಧನ ಅಥವಾ ಉಚಿತ ವಿದ್ಯುತ್ ಯೋಜನೆಗಳು ಬಂದ್ ಆಗಲಿವೆ. ನೇಕಾರರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಕೇಂದ್ರ ಸರ್ಕಾರ ಈ ಹಿಂದೆ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುತ್ತಿದ್ದ ಸಹಾಯಧನ ಕ್ರಮೇಣ ನಿಲ್ಲಿಸಿದಂತೆ ವಿದ್ಯುತ್ ಸಬ್ಸಿಡಿ ಕೂಡ ನಿಲ್ಲಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಟಾಟಾ ಪವರ್‌ ಸಂಸ್ಥೆ ವಿದ್ಯುತ್ ಕ್ಷೇತ್ರವನ್ನು ತನ್ನ ವಶಕ್ಕೆ ಪಡೆಯಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಇಂಧನ ಇಲಾಖೆ ಜೊತೆ ಸಮಾಲೋಚಿಸದೆ ವಿದ್ಯುತ್ ವಿತರಣೆ ಮಾಡುತ್ತಿರುವ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಅಭಿಪ್ರಾಯ ಪರಿಗಣಿಸದೆ ಖಾಸಗಿ ವಿದ್ಯುತ್ ವಿತರಣಾ ಕಂಪನಿ ನೇರವಾಗಿ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಿರುವುದು ವಿದ್ಯುತ್ ಕಾಯ್ದೆ-2003ರ ಗಂಭೀರ ಉಲ್ಲಂಘನೆ ಆಗಿದೆ. ಟಾಟಾ ಪವರ್ ಕಂಪನಿಯ ಅರ್ಜಿಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಿ:

ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಜೂನ್ 17ರಂದು ವಿದ್ಯುತ್ ಖಾಸಗೀಕರಣದ ವಿರುದ್ಧ ಮಹಾಲಿಂಗಪುರ ತಾಲೂಕು ಹೋರಾಟ ಸಮಿತಿಯ ಅಡಿಯಲ್ಲಿ ರೈತರು, ನೇಕಾರರು, ಕಾರ್ಮಿಕರು ಸೇರಿ ಹೆಸ್ಕಾಂ ಕಚೇರಿ ಮುಂದೆ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಶಾಸಕರಾದ ಸಿದ್ದುಸವದಿ ಮತ್ತು ಅವರ ಹಿಂಬಾಲಕರು ಕೇಂದ್ರ ಸರ್ಕಾರದ ವಿರುದ್ಧ ಪ್ರಸ್ತಾಪ ಮಾಡಬಾರದು ಎಂದು ಹೇಳಿ ನೇಕಾರ ಮುಖಂಡ ಶಿವಲಿಂಗ ಟರ್ಕಿ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.


ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ತಕ್ಷಣ ಶಾಸಕರು ಈ ಬಗ್ಗೆ ಕ್ಷಮೆ ಕೇಳಬೇಕು ಮತ್ತು ನೇಕಾರ ಮುಖಂಡರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು. ಸರ್ಕಾರ ನೇಕಾರರ ನೆರವಿಗೆ ಧಾವಿಸುವ ಬದಲು ಖಾಸಗೀಕರಣ ಮಾಡುವ ಮೂಲಕ ನೇಕಾರರ ಹಿತಕ್ಕೆ ಧಕ್ಕೆ ತರುತ್ತಿರುವುದು ಖಂಡನೀಯ ಎಂದರು.

ಧರ್ಮಾವರಂಗೆ ರೈಲು ಕಲ್ಪಿಸಿ:

ತಾಲೂಕಿನ ನೇಕಾರರು ಸೀರೆಗಳನ್ನು ಹೊತ್ತು ಬಸ್‌ಗಳ ಮೂಲಕ ಧರ್ಮಾವರಂಗೆ ಸಾಗುವ ಪರಿಸ್ಥಿತಿ ಇದೆ. ಈಗಾಗಲೇ ಒಂದು ರೈಲು ಮಾತ್ರ ಧರ್ಮಾವರಂಗೆ ಹೋಗುತ್ತಿದ್ದು, ನೇಕಾರರು ಗಂಟೆಗಟ್ಟಲೆ ಕಾಯಬೇಕಿದೆ. ಮತ್ತೊಂದು ರೈಲಿನ ವ್ಯವಸ್ಥೆ ಮಾಡಿದರೆ ನೇಕಾರರಿಗೆ ಅನುಕೂವಾಗುತ್ತದೆ. ಈ ಬಗ್ಗೆ ಸ್ಥಳೀಯ ಸಂಸದರು ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಆರ್.ಎಸ್.ಶ್ರೀನಿವಾಸ್, ಸಹ ಕಾರ್ಯದರ್ಶಿ ಎನ್.ಮುನಿರಾಜು, ರಾಮು, ಚೌಡಯ್ಯ, ದೂಡ್ಡಬಳ್ಳಾಪುರ ಟೆಕ್ಸ್ ಟೈಲ್ ವೀವರ್ಸ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹಮೂರ್ತಿ, ಬಿ.ಆರ್.ಬಾಬು, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

23ಕೆಡಿಬಿಪಿ1-

ದೊಡ್ಡಬಳ್ಳಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್ ಮಾತನಾಡಿದರು.