ಅಂಬೇಡ್ಕರ್‌ ಆದರ್ಶ ಮೈಗೂಡಿಸಿಕೊಳ್ಳಿ: ಯಶ್ಪಾಲ್‌ ಸುವರ್ಣ

| Published : Apr 15 2025, 01:00 AM IST

ಸಾರಾಂಶ

ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಡಾ. ಬಿ.ಆರ್. ಅಂಬೇಡ್ಕರ್ 134 ನೇ ಜನ್ಮ ದಿನಾಚರಣೆಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ವಿಶ್ವದ ಶೇ.20 ರಷ್ಟು ಜನಸಂಖ್ಯೆಯಿರುವ ಭಾರತದ 144 ಕೋಟಿ ಜನತೆಗೆ ಸಮಾನತೆಯ ಮೂಲಕ ನ್ಯಾಯ ಒದಗಿಸಿಕೊಟ್ಟ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆ, ವಿಚಾರಧಾರೆಗಳು ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಕರೆ ನೀಡಿದ್ದಾರೆ.

ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಡಾ. ಬಿ.ಆರ್. ಅಂಬೇಡ್ಕರ್ 134 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಮಾತನಾಡಿ, ಮಹಿಳೆಯರು ಇತರರಷ್ಟೇ ಸಮಾನ ಹಕ್ಕುಗಳನ್ನು ಪಡೆಯಬೇಕೆಂಬ ಉದ್ದೇಶದಿಂದ ಹಿಂದೂ ಕೋಡ್ ಬಿಲ್, ಹೆಣ್ಣು ಮಕ್ಕಳಿಗೆ ಆಸ್ತಿಯ ಹಕ್ಕು, ವಿಚ್ಛೇದನದ ಹಕ್ಕು ಸೇರಿದಂತೆ ಮತ್ತಿತರ ಕ್ರಾಂತಿಕಾರಕ ಹಕ್ಕುಗಳನ್ನು ರೂಪಿಸಿದರು ಎಂದರು.

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಎಚ್‌. ಉಪನ್ಯಾಸ ನೀಡಿದರು. ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ - ಪಂಗಡಲ್ಲಿ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಡಾ.ಬಾಬು ಜಗಜೀವನ್ ರಾಮ್ 2025 ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಚಿಂತಕ ಜಯನ್ ಮಲ್ಪೆ ಮತ್ತು ಉಡುಪಿ ನಗರಸಭೆಯ ಹಿರಿಯ ಪೌರ ಕಾರ್ಮಿಕ ಸುರೇಶ್ ಹಾಗೂ ದಂಡ್ಯಮ್ಮ ಅವರನ್ನು ಗೌರವಿಸಲಾಯಿತು. ಅಂತರ್ಜಾತಿ ವಿವಾಹದ ಜೋಡಿಗಳಿಗೆ ಗೌರವ ಧನ ಚೆಕ್ ವಿತರಿಸಲಾಯಿತು.

ಹಾಸ್ಟೆಲ್ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಎಸ್ಪಿ ಡಾ. ಅರುಣ್ ಕೆ., ಎಡಿಸಿ ಅಬೀದ್ ಗದ್ಯಾಳ, ಎಎಸ್ಪಿಗಳಾದ ಸಿದ್ದಲಿಂಗಪ್ಪ ಹಾಗೂ ಪಿ. ಎ. ಹೆಗಡೆ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಇದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಸ್ವಾಗತಿಸಿದರು. ವಂದಿಸಿದರು. ಶಿಕ್ಷಕ ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

ರಜತಾದ್ರಿಯ ಆವರಣದಲ್ಲಿರುವ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಅವರಿಂದ ಅಂಬೇಡ್ಕರ್ ಪುತ್ಥಳಿಯ ಬಳಿ ಬುದ್ಧ ವಂದನೆ ಕಾರ್ಯಕ್ರಮ ಜರಗಿಸಿದರು. ಗಣೇಶ್ ಬಾರ್ಕೂರು ತಂಡದವರಿಂದ ಡೋಲು, ಕೊಳಲು ವಾದನ, ವಾಸುದೇವ್ ಬನ್ನಂಜೆ ತಂಡದಿಂದ ಚಂಡೆ ವಾದನ, ಶಂಕರ್ ದಾಸ್ ಚೆಂಡ್ಕಳ ಜಾನಪದ ಕಲಾತಂಡದಿಂದ ಕ್ರಾಂತಿ ಗೀತೆ ಹೇಳಲಾಯಿತು.