ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ

| Published : Jan 14 2024, 01:31 AM IST

ಸಾರಾಂಶ

ಬೆಳಗಾವಿ ನಗರದ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಕಾಲೇಜು ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಒಕ್ಕೂಟ, ಉಚಿತ ಕಾನೂನು ಸೇವೆ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯಲ್ಲಿ ಹೇಳಿಕೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಾನೂನು ವೃತ್ತಿಯು ಅತ್ಯಂತ ಶ್ರೇಷ್ಠವಾದ ಹಾಗೂ ಗೌರವಾನ್ವಿವಾದ ವೃತ್ತಿಯಾಗಿದ್ದು, ನೂರೆಂಟು ಅವಕಾಶಗಳಿವೆ. ವಿದ್ಯಾರ್ಥಿಗಳು ಅದನ್ನು ಅತ್ಯಂತ ಕಠಿಣ ಪರಿಶ್ರಮದಿಂದ ಸಾಧಿಸಿಕೊಳ್ಳಬೇಕು ಎಂದು ಬೆಳಗಾವಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ರಾಚೋಟಿ ಎಂ.ಶಿರೂರ ಹೇಳಿದರು.

ನಗರದ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಕಾಲೇಜು ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಒಕ್ಕೂಟ, ಉಚಿತ ಕಾನೂನು ಸೇವೆ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಕೋರ್ಸ್‌ನ್ನು ತಮ್ಮ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಾನೂನು ವೃತ್ತಿಯ ಮಹತ್ವವನ್ನು ಒತ್ತಿ ಹೇಳಿದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಯಶಸ್ಸನ್ನು ಸಾಧಿಸಬೇಕು. ಕಾನೂನು ವೃತ್ತಿ ಶಿಕ್ಷಣದಲ್ಲಿ ಬದಲಾವಣೆಗಳನ್ನು ತಂದಿದೆ. ಪ್ರಸ್ತುತ ಯುಗದಲ್ಲಿ ಕಾನೂನು ಪದವೀಧರರಿಗೆ ಲಭ್ಯವಿರುವ ವಿವಿಧ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಶ್ರಮವಹಿಸಿ ದುಡಿದು ಈ ಉದಾತ್ತ ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೇರಬೇಕು. ಎಷ್ಟೇ ಬುದ್ಧಿಶಕ್ತಿ ಇದ್ದರೂ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ನ್ಯಾಯವಾದಿ ಆರ್.ಬಿ.ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಜಾಗತೀಕರಣವು ಕಾನೂನು ಪದವೀಧರರಿಗೆ ಅನೇಕ ಮಾರ್ಗಗಳನ್ನು ತೆರೆದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಂಡ ಕವಿತಾ ಹಿರೇಮಠ, ಗೋಪಿಕಾ ಹೊಸಮನಿ ಮತ್ತು ಅಕ್ಷಯ ವಾಲಿ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಉಮಾ ಹಿರೇಮಠ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುನಂದಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಯಸಿಂಹ ಸ್ವಾಗತಿಸಿ, ಪರಿಚಯಿಸಿದರು. ವಿದ್ಯಾರ್ಥಿ ವಿನಯ ಪೂಜಾರ ವಂದಿಸಿದರು. ಬಿಎಎಲ್ ಎಲ್ ಬಿ ವಿದ್ಯಾರ್ಥಿಗಳಾದ ಅನುಷಾ ಮತ್ತು ಆಕಾಶ್ ನಿರೂಪಿಸಿದರು.