ಸಾರಾಂಶ
ತುರ್ತು ಪರಿಸ್ಥಿತಿ - ಕಾಂಗ್ರೆಸ್ ಕರಾಳ ಇತಿಹಾಸ ವರ್ಷಕ್ಕೆ 50 ವರ್ಷಗಳು ಕಾರ್ಯಕ್ರಮವನ್ನು ನಗರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ-ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷಗಳು ಕಾರ್ಯಕ್ರಮವನ್ನು ನಗರ ಬಿಜೆಪಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ ಮಾತನಾಡಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡ ತುರ್ತು ಪರಿಸ್ಥಿತಿಯನ್ನು ರಾಜ್ಯದಲ್ಲಿ ಅಳವಡಿಸಿದೆ. ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ಮುಖಗಳು ರಾಜ್ಯ ಸರ್ಕಾರದ ಆಡಳಿತದಲ್ಲೂ ಕಂಡು ಬರುತ್ತಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಷ್ಟೀಕರಣ ಮತ್ತು ಓಲೈಕೆಯ ರಾಜಕೀಯಕ್ಕಾಗಿ ತಮ್ಮ ವಿರೋಧಿಗಳ ವಿರುದ್ಧ ಕೇಸ್ ದಾಖಲಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.ರಾಜ್ಯದಲ್ಲಿ ಪ್ರತಿ ನಿತ್ಯ 30ರಿಂದ 40 ಮಂದಿ ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುತ್ತಿದೆ ಎಂದು ಟೀಕಿಸಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅವರ ಪಕ್ಷದ 5 ಮಂದಿ ಶಾಸಕರೇ ಮಾತನಾಡಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿಗಳಿಗೆ ಏನು ಅನಿಸುವುದಿಲ್ಲ ಎಂದು ಆರೋಪಿಸಿದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿದ್ದ ಹೋರಾಟಗಳನ್ನು ಹತ್ತಿಕ್ಕಲು ಅಂದು ದೇಶದಲ್ಲಿ 19 ತಿಂಗಳು ತುರ್ತು ಪರಿಸ್ಥಿತಿಯನ್ನು ಹೇರಲಾಗಿತ್ತು. ಜಿಲ್ಲೆಯಲ್ಲೂ 15ಕ್ಕೂ ಅಧಿಕ ಮಂದಿ ಮುಂಚೂಣಿ ಮುಖಂಡರನ್ನು ಬಂಧಿಸಿ ಅಂದು ಜೈಲಿಗೆ ಅಟ್ಟಲಾಗಿತ್ತು ಎಂದರು.ಇಂದಿನ ಕಾಂಗ್ರೆಸ್ನ ದುರಾಡಳಿತವನ್ನು ಜನರಿಗೆ ತಿಳಿಸಬೇಕೆಂದು ಕಾರ್ಯಕರ್ತರಿಗೆ ರಂಜನ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ ಮತ್ತಿತರರು ಹಾಜರಿದ್ದರು.