ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ವಿದ್ಯಾರ್ಥಿಗಳಿಗೆ ಯಾವುದೇ ಖರ್ಚಿಲ್ಲದೇ ಸರ್ಕಾರಿ ಶಾಲೆಗಳಲ್ಲಿ ಉದ್ಯಮ ಕ್ಷೇತ್ರದ ಸಹಕಾರದೊಂದಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಸಿಆರ್ಎಸ್ ಅನುದಾನದ ಒಂದು ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದರು.
ಕಿರುಗಾವಲು ಭಾಗಕ್ಕೆ ಮೊರಾರ್ಜಿ ಶಾಲೆ ಆರಂಭ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸಿರುವ ಡಿಜಿಟಲಿಕರಣದ ಜೊತೆಗೆ ಮಲ್ಟಿಮೀಡಿಯಾಗಳನ್ನು ಸ್ಥಾಪಿಸಿ ಗ್ರಾಮೀಣ ವಿದ್ಯಾಥಿರ್ಗಳು ಉನ್ನತ ಶಿಕ್ಷಣವನ್ನು ಸುಲಭವಾಗಿ ಪಡೆಯುವಂತೆ ಯೋಜನೆ ರೂಪಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಕೋರಿದರು.ಕೆಇಬಿ ಮುಂಭಾಗವಿರುವ ಹಳೆ ಸರ್ಕಾರಿ ಶಾಲೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗಕ್ಕೆ ವರ್ಗಾಹಿಸಿ ಅಲ್ಲಿ ಪ್ರಜಾಸೌಧ ಹಾಗೂ ಪ್ರವಾಸಿ ಮಂದಿರದ ಮುಂಭಾಗ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಸದ್ಯದಲ್ಲಿಯೇ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. ಪಟ್ಟಣದಿಂದ ಮಾರೇಹಳ್ಳಿ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು 1.25 ಕೋಟಿ ರು. ವೆಚ್ಚದಲ್ಲಿ ಜಾತ್ರೆಗೂ ಮುಂಚಿತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸರ್ಕಾರ ತಾಲೂಕಿನ 40 ಕಿ.ಮೀ ಗ್ರಾಮೀಣ ರಸ್ತೆಯನ್ನು ದುರಸ್ತಿಗೊಳಿಸಲು ವಿಶೇಷ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕ್ಷೇತ್ರಕ್ಕೆ ಬೇಕಾದ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
ಶಿಕ್ಷಣ, ಆರೋಗ್ಯ ನೀರಾವರಿಗೆ ವಿಶೇಷ ಆಸಕ್ತಿ ವಹಿಸಲಾಗಿದೆ. ಕೈಗಾರಿಕೆ ಸ್ಥಾಪಿಸಲು ಎಲ್ಲಾ ತಯಾರಿ ಮಾಡಲಾಗುತ್ತಿದೆ. ಒಂದೂವರೆ ಕೋಟಿ ಹಣವನ್ನು ಸರ್ಕಾರ ಗಗನಚುಕ್ಕಿ ಜಲಪಾತದಲ್ಲಿ ನಡೆಯುತ್ತಿರುವ ಮುಂದುವರಿದ ಕಾಮಗಾರಿಗೆ ಅನುದಾನ ನೀಡಿದೆ. ಮಳವಳ್ಳಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದರು.ಈ ವೇಳೆ ತಹಸೀಲ್ದಾರ್ ಎಸ್.ವಿ.ಲೊಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ ಉಮಾ, ಪುರಸಭೆ ಸದಸ್ಯರಾದ ನೂರುಲ್ಲಾ, ಆನಂದ್, ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ದೇವರಾಜು, ಕಿರಣ್ ಶಂಕರ್, ಪುಟ್ಟಸ್ವಾಮಿ, ಕೃಷ್ಣ, ರವಿ, ಚೌಡಪ್ಪ ಸೇರಿದಂತೆ ಇತರರು ಇದ್ದರು.