ಸಾರಾಂಶ
ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೃಷಿ ಇಲಾಖೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ರೈತರ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವ ಮೂಲಕ ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡುತ್ತಿದೆ. ರೈತರು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕಾದಲ್ಲಿ ಕೃಷಿಯಲ್ಲಿ ತಾಂತ್ರಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ನಗರ ಕೃಷಿ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ವರ್ಷವೂ ಕೃಷಿ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಕಳೆದ ವರ್ಷ, ಪ್ರಸ್ತುತ ವರ್ಷವೂ ಮಳೆ ಕೊರತೆಯಾಗಿಲ್ಲ. ಆದರೂ ಬಹುತೇಕ ಜಮೀನುಗಳಲ್ಲಿ ಶೇಂಗಾ ಬಿತ್ತನೆ ಕುಂಠಿತವಾಗಿದೆ. ರೈತರು ಅಕಾಲಿಕ ಮಳೆಯಿಂದ ಈ ಸಮಸ್ಯೆ ಎದುರಿಸುತ್ತಿದ್ದಾರೆ. ತಾಲೂಕಿನ ರೈತರ ಸ್ಥಿತಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದಿದ್ದು, ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳಿಗೆ ಗಮನಕ್ಕೆ ತರುವ ಭರವಸೆ ನೀಡಿದರು.
ಅಖಂಡ ಕರ್ನಾಟಕ ರೈತ ಸಂಘ ಮಾಜಿ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ, ರೈತ ಸಂಘದ ಹಿರಿಯ ಉಪಾಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣ, ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ರೈತರಿಗೆ ಶುಭಹಾರೈಸಿದರು.ಸಮಗ್ರಕೃಷಿ ಬೇಸಾಯ ಪದ್ಧತಿ ಅಳವಡಿಸಿಕೊಂಡ ಪ್ರಗತಿಪರ ರೈತರಾದ ಚಿಕ್ಕೇನಹಳ್ಳಿ ಪ್ರೇಮಕ್ಕ, ವಡೆರಹಳ್ಳಿಮಾರಣ್ಣ, ದುರ್ಗಾವರ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಉಪ ಕೃಷಿ ನಿರ್ದೇಶಕ ಪ್ರಭಾಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಇಒ ಶಶಿಧರ, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಕೃಷಿ ಅಧಿಕಾರಿ ಜೆ.ಅಶೋಕ್, ಪಶು ವೈದ್ಯ ರೇವಣ್ಣ, ನಂದಿನಿ, ಶಿವಲೀಲಾ, ಜೀವನ್ ಮಂಜುನಾಥ, ತಿಪ್ಪೇಸ್ವಾಮಿ, ಗುರುನಾಥ, ಕಿಸಾನ್ ಸೇಲ್ ಜಿಲ್ಲಾಧ್ಯಕ್ಷ ನಾಗರಾಜು, ಕೆಡಿಪಿ ಸದಸ್ಯ ಅಂಗಡಿರಮೇಶ್, ಚೌಳೂರು ಬಸವರಾಜು, ಜಿಲ್ಲಾ ಕೆಡಿಪಿ ಸದಸ್ಯ ಓ.ರಂಗಸ್ವಾಮಿ ಮತ್ತಿತರರಿದ್ದರು.