ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಮುಖ್ಯ: ಕೆ.ನಾಗೇಶ್‌

| Published : Dec 02 2024, 01:15 AM IST

ಸಾರಾಂಶ

ಯಾವ ವಿದ್ಯಾರ್ಥಿಗಳಲ್ಲಿ ಯಾವ ಪ್ರತಿಭೆಗಳು ಅಡಕವಾಗಿವೆ, ಹುದುಗಿವೆ ಎನ್ನುವುದನ್ನು ತಿಳಿಯಬೇಕಾದರೆ ಪ್ರತಿಭಾ ಕಾರಂಜಿ ವೇದಿಕೆಗಳಿಂದ ಮಾತ್ರ ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆಗಳು ಅನಾವರಣಗೊಂಡಾಗ ಆ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಶಿಕ್ಷಕರು ಮತ್ತು ಪೋಷಕರು ಶ್ರಮಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತಲ್ಲ. ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ಪ್ರತಿಭೆ ಇರುತ್ತದೆ. ಅದಕ್ಕೆ ಪ್ರೋತ್ಸಾಹ ನೀಡಿದಾಗ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ್ ಹೇಳಿದರು.

ನಗರದಲ್ಲಿರುವ ಪೊಲೀಸ್ ಕಾಲೋನಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ದಕ್ಷಿಣ ವಲಯ ವ್ಯಾಪ್ತಿಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳು ಪಠ್ಯ ವಿಷಯಕ್ಕಷ್ಟೇ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನಹರಿಸಬೇಕು. ಸಂಸ್ಕೃತಿಯನ್ನು ರೂಢಿಸಿಕೊಂಡು ಸಾಂಸ್ಕೃತಿಕವಾಗಿ ಬೆಳವಣಿಗೆ ಸಾಧಿಸಬೇಕು. ಇದರಿಂದ ಬಹುಮುಖ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗಲಿದೆ ಎಂದು ಹೇಳಿದರು.

ಯಾವ ವಿದ್ಯಾರ್ಥಿಗಳಲ್ಲಿ ಯಾವ ಪ್ರತಿಭೆಗಳು ಅಡಕವಾಗಿವೆ, ಹುದುಗಿವೆ ಎನ್ನುವುದನ್ನು ತಿಳಿಯಬೇಕಾದರೆ ಪ್ರತಿಭಾ ಕಾರಂಜಿ ವೇದಿಕೆಗಳಿಂದ ಮಾತ್ರ ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆಗಳು ಅನಾವರಣಗೊಂಡಾಗ ಆ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಶಿಕ್ಷಕರು ಮತ್ತು ಪೋಷಕರು ಶ್ರಮಿಸಬೇಕು ಎಂದು ನುಡಿದರು.

ಶಿಕ್ಷಕರು ಮತ್ತು ನೌಕರರಿಗೆ ಸಂಬಂಧಿಸಿದ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ೭ನೇ ವೇತನ ಆಯೋಗ ರಚನೆಯಾಗಿದೆ, ಸಮಗ್ರ ಕಾರ್ಯರೂಪದಲ್ಲಿದೆ. ಇನ್ನು ಮಂಡ್ಯದಲ್ಲಿ ನೌಕರರ ಭವನ ಮತ್ತು ಗುರುಭವನ ಸಮಗ್ರವಾಗಿ ಅಭಿವೃದ್ಧಿ ಕಾಣಬೇಕಿದೆ. ಮುಂದಿನ ದಿನಗಳಲ್ಲಿ ಅವುಗಳ ಕಡೆ ಹೆಚ್ಚು ಗಮನಹರಿಸುವುದಾಗಿ ಹೇಳಿದರು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಅನಾವರಣವಾಗಲು ಕಲೋತ್ಸವ ಬಂದಿದೆ, ಶಾಲಾ ಹಂತದಿಂದ ರಾಜ್ಯ ಹಂತದವರೆಗೂ ಇದೆ, ವಿದ್ಯಾರ್ಥಿಗಳು ವೇದಿಕೆಯನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಇದರಿಂದ ಮಕ್ಕಳು ರಾಜ್ಯ- ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವಿವಿಧ ಶಾಲೆಗಳಿಂದ ಆಗಮಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಪ್ರತಿಭಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು, ಉತ್ತಮ ಪ್ರದರ್ಶನ ನೀಡಿದ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಡಯಟ್ ಉಪನಿರ್ದೇಶಕರಾದ ಪುರುಷೋತ್ತಮ್, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ದೇವರಾಜು, ಎಸ್‌ಸಿಎಸ್‌ಟಿ ನೌಕರರ ಸಂಘದ ಅಧ್ಯಕ್ಷ ಡಿ.ಕೆ.ನಾಗರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎನ್.ನಂದೀಶ್, ಶಿಕ್ಷಕರಾದ ಮಂಗಲ ಶಿವಣ್ಣ, ಆಶಾರಾಣಿ, ಉಮೇಶ್, ಕೆ.ಹೂವಯ್ಯ, ಡಿ.ಗಿರೀಶ್, ಸುರೇಖಾ, ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.