ಸಾರಾಂಶ
ರಸ್ತೆ ಹಂಪ್ಸ್ ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಸ್ತೆ ಹಂಪ್ಸ್ ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪಾಪರೆಡ್ಡಿಪಾಳ್ಯ ನಿವಾಸಿ ಸ್ವರೂಪ್(26) ಮೃತ ಸವಾರ. ಶನಿವಾರ ರಾತ್ರಿ ಸುಮಾರು 11.45ಕ್ಕೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಈ ದುರ್ಘಟನೆ ನಡೆದಿದೆ. ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಸ್ವರೂಪ್, ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ರಸ್ತೆಯ ಹಂಪ್ಸ್ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸ್ವರೂಪ್ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಸ್ವರೂಪ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲಿಸಿದ್ದಾರೆ. ಅತಿವೇಗ ಹಾಗೂ ಅಜಾಗರೂಕತೆಯೇ ಸ್ವಯಂ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹಂಪ್ಸ್ ಕಾಣಿಸದ್ದೇ ಘಟನೆಗೆ ಕಾರಣ
ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಕಡೆಯಿಂದ ಜ್ಞಾನಭಾರತಿ ಕ್ಯಾಂಪಸ್ ಕಡೆಗೆ ತೆರಳುವ ರಸ್ತೆಯಲ್ಲಿ ಏಳೆಂಟು ಹಂಪ್ಸ್ಗಳಿವೆ. ಆದರೆ, ಈ ಹಂಪ್ಸ್ಗಳಲ್ಲಿ ಬಣ್ಣ ಮಾಸಿದ್ದು, ವಾಹನ ಸವಾರರಿಗೆ ಹಂಪ್ಸ್ ಕಾಣಿಸುವುದಿಲ್ಲ. ಮುಂದೆ ಹಂಪ್ಸ್ ಇದೆ ಎಂಬ ಸೂಚನಾ ಫಲಕವೂ ಇಲ್ಲ. ಹೀಗಾಗಿ ವೇಗವಾಗಿ ಬರುವ ವಾಹನ ಸವಾರರು ಹಂಪ್ಸ್ ಗಮನಿಸದೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಪ್ರಾಣ ಕಳೆದುಕೊಳ್ಳುವ ಸ್ದಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.