12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾಜದಲ್ಲಿನ ಅನ್ಯಾಯ, ಅಸಮಾನತೆ ಹಾಗೂ ಅಂಧಶ್ರದ್ಧೆಗಳ ವಿರುದ್ಧ ಧ್ವನಿ ಎತ್ತುವ ಅವಕಾಶ ಕಲ್ಪಿಸಿದ್ದರು
ರಾಣಿಬೆನ್ನೂರು: ಪ್ರಬುದ್ಧ ಮತದಾರರು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದ್ದಾರೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ನಗರದ ರಾಜರಾಜೇಶ್ವರಿ ಮಹಾವಿದ್ಯಾಲಯದಲ್ಲಿ ತಾಪಂ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಮಾನವ ಹಕ್ಕುಗಳ ಇಲಾಖೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ಪ್ರತಿಯೊಬ್ಬರೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿತುಕೊಂಡು ವಿಚಾರವಂತಿಕೆಯಿಂದ ಮತ ಚಲಾಯಿಸಬೇಕು. ಯುವಜನರು ಸಂವಿಧಾನದ ಆಶಯಗಳನ್ನು ಅರಿತುಕೊಂಡು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾಜದಲ್ಲಿನ ಅನ್ಯಾಯ, ಅಸಮಾನತೆ ಹಾಗೂ ಅಂಧಶ್ರದ್ಧೆಗಳ ವಿರುದ್ಧ ಧ್ವನಿ ಎತ್ತುವ ಅವಕಾಶ ಕಲ್ಪಿಸಿದ್ದರು. ಅನುಭವ ಮಂಟಪವು ಮುಕ್ತ ಚರ್ಚೆ, ವಿಚಾರ ವಿನಿಮಯ ಹಾಗೂ ಸಮಾನತೆಯ ಸಂದೇಶವನ್ನು ಸಾರುತ್ತಿತ್ತು. ಅದೇ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯವನ್ನು ಪ್ರತಿರೋಧಿಸುವ, ಪ್ರಶ್ನಿಸುವ ಹಾಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಪ್ರಶ್ನಿಸುವುದು ಮತ್ತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವೇ ಪ್ರಜಾಪ್ರಭುತ್ವದ ಪ್ರಮುಖ ಆಶಯವಾಗಿದೆ ಎಂದರು.
ನಗರಸಭೆ ಪೌರಾಯುಕ್ತ ಫಕ್ಕೀರಪ್ಪ ಇಂಗಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ, ನಗರಸಭೆ ಮಾಜಿ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ನೀಲಕಂಠಪ್ಪ ಕುಸಗೂರ, ಕುಮಾರ ಮಡಿವಾಳರ ಮತ್ತಿತರರಿದ್ದರು.