ಸಾರಾಂಶ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಸಹ ವಿದ್ಯಾಭ್ಯಾಸದ ಹಂತದಲ್ಲೇ ಕಲಿಯಬೇಕು. ಕೇವಲ ಶಿಕ್ಷಣ ಮಾತ್ರವಲ್ಲದೇ ಮಾನವೀಯ ಮೌಲ್ಯಗಳನ್ನು ಸಹ ಕಲಿತಾಗ ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸಲು ಸಾಧ್ಯವಾಗುತ್ತದೆ. ಪದವಿ ಹಂತದಲ್ಲಿ ಕಲೆ, ವಾಣಿಜ್ಯ ಸೇರಿದಂತೆ ಹಲವು ವಿಭಾಗಗಳಲ್ಲಿ ಓದಿದವರು ದೊಡ್ಡ ಸಾಧನೆ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಗುಡಿಬಂಡೆ
ಇಂದಿನ ಆಧುನಿಕ, ಸ್ಪರ್ಧಾತ್ಮಕ, ತಂತ್ರಜ್ಞಾನ ಯುಗದಲ್ಲಿ ವಿಜ್ಞಾನ ಸೇರಿದಂತೆ ತಾಂತ್ರಿಕ ಶಿಕ್ಷಣದ ಕಡೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚು ಒಲವು ತೋರುತ್ತಿದ್ದಾರೆ. ಆದರೆ ಈ ನಡುವೆ ಸಮಾಜ ವಿಜ್ಞಾನ ಸೇರಿದಂತೆ ಹಲವು ವಿಭಾಗಗಳಿಗೆ ವಿದ್ಯಾರ್ಥಿಗಳು ದಾಖಲಾಗುವುದು ಕಡಿಮೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಯೋಜನಾ ನಿರ್ದೇಶಕ ರಫೀಕ್ ಅಭಿಪ್ರಾಯಪಟ್ಟರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್. ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪದವಿ ಹಂತದಲ್ಲಿ ಕಲೆ, ವಾಣಿಜ್ಯ ಸೇರಿದಂತೆ ಹಲವು ವಿಭಾಗಗಳಲ್ಲಿ ಓದಿದ ವಿದ್ಯಾರ್ಥಿಗಳೂ ಸಹ ಇಂದು ದೊಡ್ಡ ಮಟ್ಟದ ಸಾಧನೆ ಮಾಡಿದ್ದಾರೆ ಎಂದರು.
ಮಾನವೀಯ ಮೌಲ್ಯ ಬೆಳೆಸಿಕೊಳ್ಳಿಬಳಿಕ ಕಾಲೇಜಿನ ಪ್ರಾಂಶುಪಾಲ ಅಫ್ಜಲ್ ಬಿಜಿಲಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಸಹ ವಿದ್ಯಾಭ್ಯಾಸದ ಹಂತದಲ್ಲೇ ಕಲಿಯಬೇಕು. ಕೇವಲ ಶಿಕ್ಷಣ ಮಾತ್ರವಲ್ಲದೇ ಮಾನವೀಯ ಮೌಲ್ಯಗಳನ್ನು ಸಹ ಕಲಿತಾಗ ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸಲು ಸಾಧ್ಯವಾಗುತ್ತದೆ ಎಂದರು.
ಈ ಸಮಯದಲ್ಲಿ ಕಾಲೇಜಿನ ಜಾಗದ ದಾನಿಗಳಾದ ಜಿ.ಎಸ್.ನಾಗರಾಜ್, ಕಾಲೇಜಿನ ಉಪನ್ಯಾಸಕ ನಯಾಜ್, ಕಾಲೇಜು ಅಭಿವೃದ್ದಿ ಸಮಿತಿಯ ಕೃಷ್ಣೇಗೌಡ ಹಿತವಚನ ನುಡಿದರು. ಇದೇ ಸಮಯದಲ್ಲಿ ವಿವಿಧ ಕ್ರೀಡೆಗಳು, ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಈ ಸಮಯದಲ್ಲಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣಪ್ಪ, ಅಶ್ವತ್ಥ್, ಕಾಲೇಜು ಅಭಿವೃದ್ದಿ ಸಮಿತಿಯ ನರಸಿಂಹಮೂರ್ತಿ ಸೇರಿದಂತೆ ಹಲವರು ಇದ್ದರು.