ರೈತರಿಗೆ ವಿದ್ಯುತ್ ಸಮಸ್ಯೆಯಾಗದಂತೆ ಕೃಷಿ ಚಟುವಟಿಕೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸುತ್ತಿದೆ. 3,000 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೂಚಿಸಿದರು.ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಕೊತ್ತತ್ತಿ ಗ್ರಾಮದ ಶ್ರೀವಿದ್ಯಾಗಣಪತಿ ಪ್ರೌಢಶಾಲಾ ಆವರಣದಲ್ಲಿ 1ನೇ ಹೋಬಳಿ ವೃತ್ತದಲ್ಲಿ ನಡೆದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿದರು.
ಕೊತ್ತತ್ತಿ ಹೋಬಳಿಯಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತ ಕುಟುಂಬಗಳ ಜಮೀನು ವ್ಯಾಜ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಕೆಲ ಕುಟುಂಬಗಳ ಬಳಿ ದಾಖಲೆ ಕೊರತೆ ಇದೆ. ಇದರಿಂದ ವ್ಯಾಜ್ಯಗಳು ಉಂಟಾಗಿದೆ. ಕಂದಾಯ ದಾಖಲೆಗಳನ್ನು ಪರಿಶೀಲಿಸಿ ಅರ್ಹ ರೈತರಿಗೆ ನ್ಯಾಯ ದೊರಕಿಸಬೇಕು ಎಂದರು.ಕಂದಾಯ ಇಲಾಖೆಯ ಹಲವು ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ದಾಖಲೆಗಳಲ್ಲಿ ಫಲಾನುಭವಿಗಳ ಹೆಸರುಗಳು ಲಭ್ಯವಿದ್ದಲ್ಲಿ ನಿಯಮಾನುಸಾರ ಒನ್ ಟು ಫೈಲ್ ಮಾಡಿ ಅರ್ಹರಿಗೆ ಅಗತ್ಯ ದಾಖಲೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕೊತ್ತತ್ತಿ ಹೋಬಳಿಯ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ನಿಗದಿತ ಅವಧಿಯೊಳಗೆ ಪರಿಹರಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡಂತೆ ಪ್ರಜಾ ಸೇವೆ ಆಂದೋಲನವನ್ನು ಆಯೋಜಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಇ-ಪೌತಿ ಖಾತೆ, ಹಕ್ಕುಪತ್ರ ಹಾಗೂ ದುರಸ್ತಿ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ರೈತರಿಗೆ ವಿದ್ಯುತ್ ಸಮಸ್ಯೆಯಾಗದಂತೆ ಕೃಷಿ ಚಟುವಟಿಕೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸುತ್ತಿದೆ. 3,000 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಮುಂದಿನ ದಿನಗಳಲ್ಲಿ ರೈತರ ಕೃಷಿ ಕಾರ್ಯಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ಫಲಾವುಭವಿಗಳಿಗೆ ಶಾಸಕರು ಹಕ್ಕುಪತ್ರ ವಿತರಣೆ ಮಾಡಿದರು. ಸಬ್ಸಿಡಿ ಯೋಜನೆಯಡಿ ಛಾಫ್ ಕಟ್ಟರ್ , ಮಿನಿ ಟ್ರ್ಯಾಕ್ಟರ್ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.