ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳು ಕಂಡುಬರದಂತೆ ನೋಡಿಕೊಳ್ಳುವುದು ಹಾಗೂ ಅಪೌಷ್ಟಿಕ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಕೆಲವೊಂದು ವಿಷಯಗಳನ್ನು ಚರ್ಚಿಸಿ ಸಲಹೆ ಸೂಚನೆ ನೀಡಿದರು. ಪೂರಕ ಪೌಷ್ಟಿಕ ಕಾರ್ಯಕ್ರಮದ ಭೌತಿಕ ಗುರಿ ಮತ್ತು ಸಾಧನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗೆ ಸಂಬಂಧಿಸಿದಂತೆ ಎಲ್ಲ ಯೋಜನೆಗಳನ್ನು ಫಲಾನುಭವಿಗೆ ತಲುಪಿಸಲು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯಂತೆ ಕ್ರಮ ಕೈಗೊಳ್ಳುವುದು, ಅಂಗನವಾಡಿ ಕೇಂದ್ರಗಳ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವುದು, ಒಟ್ಟಾರೆಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲ ಕಾರ್ಯಕ್ರಮಗಳು ಫಲಾನುಭವಿಗಳಿಗೆ ತಲುಪುವಂತೆ ಮಾಡುವುದು ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲು ತಿಳಿಸಿದರು.
ಯು.ಡಿ.ಐ.ಡಿ ಬಾಕಿ ಇರುವ ಕಾರ್ಡ್ಗಳಲ್ಲಿ ಈ ತಿಂಗಳಲ್ಲಿ ಸುಮಾರು 5000ರಷ್ಟು ಕಾರ್ಡ್ಗಳನ್ನು ಕ್ಲಿಯರ್ ಮಾಡುವುದು, ಯಂತ್ರ ಚಾಲಿತ ವಾಹನಗಳನ್ನು ಸಂಬಂಧಿಸಿದ ಫಲಾನುಭವಿಗೆ ಆದಷ್ಟು ಶೀಘ್ರ ವಿತರಣೆ ಮಾಡಲು ನಿರ್ದೇಶನ ನೀಡಿದರು.ಜಿಪಂ ಯೋಜನಾ ನಿರ್ದೇಶಕ (ಡಿ.ಆರ್.ಡಿ.ಎ) ರವಿ ಬಂಗಾರೆಪ್ಪನವರ, ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಆರ್.ಸಿ.ಎಚ್. ಅಧಿಕಾರಿ ಚೇತನ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜ್ ಆರ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ನಾಮದೇವ ಬಿಲಕರ್, ಕಾರ್ಯನಿರ್ವಾಹಕ ಅಭಿಯಂತರ (ಆರ್.ಡಿ.ಪಿ.ಆರ್) ಬೆಳಗಾವಿ/ಚಿಕ್ಕೋಡಿ ವಿಭಾಗ, ಜಿಲ್ಲಾ ನಿರೂಪಣಾಧಿಕಾರಿ ರೇವತಿ ಹೊಸಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮೂರ್ತಿ ಕೆ.ವಿ (ಬೆಳಗಾವಿ ನಗರ) ಹಾಗೂ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಸಿಬ್ಬಂದಿ ಉಪಸ್ಥಿತರಿದ್ದರು.