ಎಡ ಪಂಥೀಯ ಅಥವಾ ಬಲಪಂಥೀಯ ರಾಜಕೀಯ ಪಕ್ಷಗಳ ಮೇಲೆ ನಮಗೆ ನಂಬಿಕೆ ಇಲ್ಲ. ಮೊದಲು ನಾವು ನಮ್ಮ ಮೇಲೆ ನಮಗೆ ನಂಬಿಕೆ ಇಡಬೇಕು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷದ ಮೇಲೆ ನಂಬಿಕೆ ಕಳೆದುಕೊಂಡಿವೆ. ಅದನ್ನು ನಾವು ಜನರಲ್ಲಿ ತಿಳಿವಳಿಕೆ ಮೂಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಒಂದಲ್ಲ ಒಂದು ದಿನ ನಮಗೆ ಅವಕಾಶ ಬಂದೇ ಬರುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ರಾಷ್ಟ್ರೀಯ ಪಕ್ಷಗಳಿಗೆ ಸರಿ ಸಮಾನವಾಗಿ ಪ್ರಾದೇಶಿಕ ಪಕ್ಷಗಳಿಗೂ ಜನರ ಬೆಂಬಲ ಮತ್ತು ಒಲವು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜನಪರ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಮುಂದಿಟ್ಟುಕೊಂಡು ರಾಜಕೀಯವಾಗಿ ಮುನ್ನಡೆಯುವ ಉದ್ದೇಶ ಹೊಂದಿರುವುದಾಗಿ ಚಿತ್ರನಟ ಅಹಿಂಸಾ ಚೇತನ್ ತಿಳಿಸಿದರು.

ಪಟ್ಟಣದ ರಾಮದಾಸ್ ಸುಲೋಚನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯಕ್ಕೆ ಪ್ರವೇಶಿಸುವುದಾಗಿ ಸ್ಪಷ್ಟಪಡಿಸಿದರು.

ಎಡ ಪಂಥೀಯ ಅಥವಾ ಬಲಪಂಥೀಯ ರಾಜಕೀಯ ಪಕ್ಷಗಳ ಮೇಲೆ ನಮಗೆ ನಂಬಿಕೆ ಇಲ್ಲ. ಮೊದಲು ನಾವು ನಮ್ಮ ಮೇಲೆ ನಮಗೆ ನಂಬಿಕೆ ಇಡಬೇಕು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷದ ಮೇಲೆ ನಂಬಿಕೆ ಕಳೆದುಕೊಂಡಿವೆ. ಅದನ್ನು ನಾವು ಜನರಲ್ಲಿ ತಿಳಿವಳಿಕೆ ಮೂಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಒಂದಲ್ಲ ಒಂದು ದಿನ ನಮಗೆ ಅವಕಾಶ ಬಂದೇ ಬರುತ್ತದೆ ಎನ್ನುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್, ಪೆರಿಯಾರ್, ಕಾನ್ಶಿರಾಂ ಹಾಗೂ ರಾಷ್ಟ್ರಕವಿ ಕುವೆಂಪು ಅವರ ವಿಚಾರಧಾರೆಗಳ ಮೇಲೆ ನಂಬಿಕೆ ಇಟ್ಟುಕೊಂಡಿರುವ ನಾನು ಜಾತಿರಹಿತ, ವರ್ಣರಹಿತ ಹಾಗೂ ಸಮಸಮಾಜ ನಿರ್ಮಾಣದ ಪರವಾಗಿದ್ದೇನೆ ಎಂದರು.

ಜಾತಿ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದ ನಾನು ಸಂವಿಧಾನದ ಆಶಯಗಳ ಮೇಲೆ ಅಪಾರ ವಿಶ್ವಾಸ ಹೊಂದಿದ್ದೇನೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳನ್ನು ಅರಿತುಕೊಳ್ಳುವ ಕಾರ್ಯ ಮಾಡಲಿದ್ದೇನೆ. 2027ರಲ್ಲಿ ಉತ್ತರ ಕರ್ನಾಟಕದ ಯಾವುದಾದರೂ ಒಂದು ಸ್ಥಳದಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಸಾವಿರಾರು ಜನರನ್ನು ಸೇರಿಸಿ ತಮ್ಮ ರಾಜಕೀಯ ಪಕ್ಷದ ಹೆಸರು ಹಾಗೂ ಚಿಹ್ನೆ ಘೋಷಿಸುವ ನಿರೀಕ್ಷೆ ಹೊಂದಿರುವುದಾಗಿ ಹೇಳಿದರು.

ನಾಡಿನ ನೆಲ, ಜಲ, ಭಾಷ ಹಾಗೂ ಕನ್ನಡಿಗರ ಹಿತಾಸಕ್ತಿಗೆ ಧಕ್ಕೆ ಉಂಟಾದರೆ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಜನರ ಹಕ್ಕುಗಳು ಮತ್ತು ರಾಜ್ಯದ ಹಿತಾಸಕ್ತಿಗಾಗಿ ಅಗತ್ಯವಿದ್ದಲ್ಲಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದರು.

ಮುಂಬರುವ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ರೈತರು, ಕಾರ್ಮಿಕರು, ಯುವ ಜನತೆ, ಶ್ರಮಿಕರ ವರ್ಗ, ಹಿಂದುಳಿದ ವರ್ಗಗಳು, ಮಹಿಳೆಯರು, ಮದ್ಯಪಂಥೀಯ ವರ್ಗದವರು ನಮ್ಮ ಜೊತೆಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಈ ವೇಳೆ ದಲಿತ ಮುಖಂಡರಾದ ಬಸ್ತಿ ರಂಗಪ್ಪ, ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ತಾಲೂಕು ಅಧ್ಯಕ್ಷ ಶ್ರೀನಿವಾಸ್, ಕೆ.ಎಸ್.ಚಂದ್ರು, ಮೊಸಳೆಕೊಪ್ಪಲು ದಿನೇಶ್, ಬಿಎಸ್ಪಿ ಗಂಗಾಧರ್, ಗೋವಿಂದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.