ಸಾರಾಂಶ
- ಹೈಕೋರ್ಟ್ ನ್ಯಾಯಮೂರ್ತಿ ರವಿ ಹೊಸಮನಿ । ಶಾಲಾ, ಕಾಲೇಜು, ಆಸ್ಪತ್ರೆ, ಪಂಚಾಯಿತಿಗಳಲ್ಲಿ ಕಾನೂನು ಸಲಹಾ ಕೇಂದ್ರಗಳ ಉದ್ಘಾಟನೆ - - -
ಕನ್ನಡಪ್ರಭ ವಾರ್ತೆ ದಾವಣಗೆರೆ ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಿ ನ್ಯಾಯ, ಹಕ್ಕುಗಳು ಮತ್ತು ಸರ್ಕಾರದ ಜನಕಲ್ಯಾಣ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು, ಅರ್ಹರಿಗೆ ಅವುಗಳ ಲಾಭ ತಲುಪುವಂತೆ ಮಾಡಲು ಗ್ರಾಮಮಟ್ಟದಿಂದ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾನೂನು ಜಾಗೃತಿಗಾಗಿ ಜಿಲ್ಲೆಯಲ್ಲಿ ಕಾನೂನು ಸಲಹಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶ ಹಾಗೂ ದಾವಣಗೆರೆ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವಿ. ಹೊಸಮನಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿಯ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾನೂನು ಸಲಹಾ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಒದಗಿಸುವ ದೃಷ್ಠಿಯಿಂದ ಜಿಲ್ಲೆಯಲ್ಲಿ 900ಕ್ಕೂ ಹೆಚ್ಚು ಕಾನೂನು ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಮಾಜದಲ್ಲಿ ಎಲ್ಲರೂ ಒಂದೇ ಸಮನಾಗಿಲ್ಲ. ಆದ್ದರಿಂದ ಸಂವಿಧಾನ ಪೀಠಿಕೆ ಅನ್ವಯ ವಿದ್ಯಾರ್ಥಿಗಳು, ಹಿರಿಯ ನಾಗರೀಕರು, ಅಂಗವಿಕಲರು, ಮಹಿಳೆಯರು, ತೃತೀಯಲಿಂಗಿಗಳಿಗೂ ಸಮಾನ ನ್ಯಾಯ, ಸರ್ಕಾರದ ಯೋಜನೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೆ ಇಂದಿಗೂ ಕೆಲವರಿಗೆ ಸಮರ್ಪಕವಾಗಿ ಕಾನೂನಾತ್ಮಕ ನ್ಯಾಯ ಲಭಿಸುತ್ತಿಲ್ಲ, ಇಂತಹವರಿಗೆ ಪಾರದರ್ಶಕವಾಗಿ ಸ್ಥಳೀಯಮಟ್ಟದಲ್ಲಿ ನ್ಯಾಯ ದೊರಕಿಸಿಕೊಡುವ ಹಿತದೃಷ್ಠಿಯಿಂದ ಸಲಹಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಲು ತಿಳಿಸಿದರು.ಭಾರತ ಸಂವಿಧಾನ ಪೀಠಿಕೆ ಅದ್ಭುತವಾಗಿದೆ. ಯಾಕೆಂದರೆ ಅದರಲ್ಲಿ ಅಡಗಿರುವ ಉದ್ದೇಶ ಕಾರಣವಾಗಿದೆ. ಯಾವುದೇ ಒಂದು ಯೋಜನೆ ಜಾರಿಗೆ ಮೊದಲು ಎಲ್ಲರನ್ನು ಒಟ್ಟುಗೂಡಿಸಬೇಕು. ಆದರೆ ಒಬ್ಬ ವ್ಯಕ್ತಿಗೆ 2 ಬಾರಿ ಆ ಯೋಜನೆ ತಲುಪಬಾರದು, ತಲುಪಿದರೆ ಆ ಯೋಜನೆ ವಿಫಲವಾದಂತೆ. ಜನರಿಗೆ ಇರುವ ಸಮಸ್ಯೆಗಳ ಬಗ್ಗೆ ಅಥವಾ ಯಾವ ವಿಷಯದ ಬಗ್ಗೆ ಕಾನೂನು ಸಲಹೆ ಅಗತ್ಯವಿರುತ್ತದೋ ಅಂತಹವರು ಉಚಿತ ಸಹಾಯವಾಣಿ ಸಂಖ್ಯೆಯಾದ 15100 ಗೆ ಕರೆಮಾಡಿ ಮಾಹಿತಿ ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಶಿಕ್ಷಣ ಜ್ಞಾನವಿದ್ದರಷ್ಟೇ ಸಾಲದು. ಶಿಕ್ಷಣದ ಜೊತೆಗೆ ಕಾನೂನಿನ ಅರಿವು ಇರಬೇಕು. ಮಹಿಳಾ ಮತ್ತು ಮಕ್ಕಳ ದೌರ್ಜನ್ಯಕ್ಕೆ ಒಳಗಾದಾಗ ಪ್ರತಿಯೊಬ್ಬರು ನಮ್ಮ ಹಕ್ಕುಗಳ ರಕ್ಷಣೆ ಮಾಡಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ. ಅದರಲ್ಲೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ವಿದ್ಯಾವಂತರೇ ಡಿಜಿಟಲ್ ಅರೆಸ್ಟ್ ಗೆ ಒಳಗಾಗುತ್ತಿದ್ದಾರೆ. ಇಲಾಖೆ ವತಿಯಿಂದ ಯಾವುದೇ ಕಾರ್ಯಕ್ರಮ, ಕಾರ್ಯಗಾರ ಆಯೋಜನೆ ಮಾಡಿದರೂ ಸಹ ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ತಮ್ಮಗಳ ಸಹಕಾರ ಮುಖ್ಯ. ಆಗಾಗಿ ಜಿಲ್ಲೆಯಲ್ಲಿ ಇಂತಹ ಕಾರ್ಯಗಾರ ಅಗತ್ಯ ಎಂದರು.ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ.ವೇಲಾ ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ವಂದಿಸಿದರು. ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲ ರಾವ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುರುಬಸವರಾಜ್, ವಿವಿಧ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ವಕೀಲರು ಉಪಸ್ಥಿತರಿದ್ದರು.
- - -(ಬಾಕ್ಸ್) * ಶೇ.30 ಅಪಘಾತ ಪ್ರಕರಣ ಇಳಿಕೆ: ಡಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಜಿಲ್ಲೆಯಾದ್ಯಂತ ಈವರೆಗೂ ಪೋಕ್ಸೋ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ, ಮಹಿಳಾ ರಕ್ಷಣೆ, ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು, ರಸ್ತೆ ಸುರಕ್ಷತೆ ಸೇರಿದಂತೆ ಹಲವಾರು ಜಾಗೃತಿ ಕಾರ್ಯಾಗಾರ ಆಯೋಜಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಸಾಕಷ್ಟು ಅರಿವು ಮೂಡಿಸಲಾಗಿದೆ. ರಸ್ತೆ ಸುರಕ್ಷತೆ ಕಾರ್ಯಾಗಾರದಿಂದ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.30ರಷ್ಟು ಅಪಘಾತ ಪ್ರಕರಣ ಇಳಿಕೆಯಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪ್ರಾರಂಭಿಸಿರುವ ಕಾನೂನು ಸಲಹಾ ಕೇಂದ್ರಗಳಿಂದ ಅತ್ಯುತ್ತಮ ಕಾರ್ಯವಾಗಲಿದೆ. ಇದರಿಂದ ಜಿಲ್ಲೆಯಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸ್ಥಳೀಯ ಮಟ್ಟದಲ್ಲಿಯೇ ತನ್ನ ಹಕ್ಕು ಮತ್ತು ನ್ಯಾಯ ಪಡೆಯಲು ಸಹಕಾರಿಯಾಗಿದೆ. ಅದರಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳು ತಂಡೋಪ ತಂಡವಾಗಿ ಕಾರ್ಯನಿರ್ವಹಿಸಿ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತೇವೆ ಎಂದರು.
- - --26ಕೆಡಿವಿಜಿ39, 40:
ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಕಾನೂನು ಸಲಹಾ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ರವಿ ವಿ. ಹೊಸಮನಿ ಮಾತನಾಡಿದರು.