ನಕಲು ಮುಕ್ತ ಪರೀಕ್ಷೆ ನಡೆಸಲು ಸಜ್ಜು

| Published : Mar 23 2024, 01:07 AM IST

ಸಾರಾಂಶ

ವೆಬ್ ಕ್ಯಾಮರಾ ಕಣ್ಗಾವಲಿನಲ್ಲಿ ಮಾ.26 ರಂದು ಜರುಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ನಕಲು ಮುಕ್ತ ಪರೀಕ್ಷೆ ನಡೆಯಬೇಕು. ನಕಲು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ರಾಜೇಶ ಬುರ್ಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಡಚಣ

ವೆಬ್ ಕ್ಯಾಮರಾ ಕಣ್ಗಾವಲಿನಲ್ಲಿ ಮಾ.26 ರಂದು ಜರುಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಕಲು ಮುಕ್ತ ಪರೀಕ್ಷೆ ನಡೆಯಬೇಕು. ನಕಲು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್‌ ರಾಜೇಶ ಬುರ್ಲಿ ಹೇಳಿದರು.

ಪಟ್ಟಣದ ಎಂಇಎಸ್‌ ಸಭಾ ಭವನದಲ್ಲಿ ಶುಕ್ರವಾರ ಜಿಪಂ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಿಇಒ ಎಸ್‌.ಜೆ.ನಾಯಕ ಮಾತನಾಡಿ, ಚಡಚಣ ತಾಲೂಕು ಶೈಕ್ಷಣಿಕ ವಲಯದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 3136 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಕೇವಲ ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುತ್ತಾ ಬಂದಿದೆ. ಆದರೆ, ಮೇಲಧಿಕಾರಿಗಳ ಆದೇಶದಂತೆ ಈ ಬಾರಿ ಬಿಇಒ ಹಾಗೂ ಡಿಡಿಪಿಐ ಕಚೇರಿಗಳಲ್ಲಿ ಕುಳಿತು ಪರೀಕ್ಷಾ ಕೇಂದ್ರವನ್ನು ವೀಕ್ಷಣೆ ಮಾಡುವಂತೆ ವೆಬ್‌ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲು ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಚಸಿದಂತೆ ಸಜ್ಜಾಗುತ್ತಿವೆ. ಈ ಬಾರಿ ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಯಲು ಸಹಕರಿಸುವುದರ ಜೊತೆಗೆ ತಾಲೂಕಿಗೆ ಹಾಗೂ ಜಿಲ್ಲೆಗೆ ಯಾವುದೇ ಕೆಟ್ಟ ಹೆಸರು ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ದೈಹಿಕ ಶಿಕ್ಷಣಾಧಿಕಾರಿ ಎಸ್‌ ಬಿ ಚವ್ಹಾಣ, ತಾಲೂಕು ಪಂಚಾಯ್ತಿ ಅಧಿಕಾರಿ ಶಿವದತ್ತ ಕೊಟ್ಟಲಗಿ, ಎ.ಎಸ್‌ಐ ಬಿ.ವೈ ಇಂಗಳೆ ಸೇರಿದಂತೆ ಇತರರು ಇದ್ದರು.