ಸಾರಾಂಶ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿದರು.
ಕನ್ನಡಪ್ರಭ ವಾರ್ತೆ ದಾವಣಗೆರೆ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಯಾಸಿನ್ ಅಹಮ್ಮದ್ ಖಾನ್ ಪಠಾಣ್ ಪರ ಮತಯಾಚಿಸಲಾಯಿತು.ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ಷೇತ್ರದ ಚಿಲ್ಲೂರ-ಬಡ್ನಿ ಗ್ರಾಮಗಳಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಭಾರೀ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು. ಜನಪರವಾದ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳು ಜನರಿಗೆ ಸಾಕಷ್ಟು ಅನುಕೂಲಕರವಾಗಿವೆ ಎಂದು ಹೇಳಿದರು.
ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವು ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಮತದಾರರು ಆರ್ಶೀವದಿಸಬೇಕು ಎಂದು ಕೋರಿದರು.ಈ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ, ಮಾಜಿ ಸಚಿವ ಎಚ್.ಆಂಜನೇಯ, ಶಾಸಕರಾದ ಲಕ್ಷಣ ಸವದಿ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ದಾವಣಗೆರೆ ಮೇಯರ್ ಕೆ.ಚಮನ್ ಸಾಬ್, ಉಪ ಮೇಯರ್ ಶಾಂತಕುಮಾರ ಸೋಗಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹ್ಮದ್ ಖಾನ್, ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮಾಗಾನಹಳ್ಳಿ ಬಿ.ಕೆ.ಪರಶುರಾಮ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮಹಿಳಾ ವಿಭಾಗದವರು ಇದ್ದರು.