ತುಕಾರಾಂ 4 ಬಾರಿ ಶಾಸಕರಾಗಿದ್ರೂ ಕ್ಷೇತ್ರ ಅಭಿವೃದ್ಧಿಯಾಗಿಲ್ಲ: ವಿಜಯೇಂದ್ರ

| Published : Nov 11 2024, 12:58 AM IST

ತುಕಾರಾಂ 4 ಬಾರಿ ಶಾಸಕರಾಗಿದ್ರೂ ಕ್ಷೇತ್ರ ಅಭಿವೃದ್ಧಿಯಾಗಿಲ್ಲ: ವಿಜಯೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಈ.ತುಕಾರಾಂ ನಾಲ್ಕು ಬಾರಿ ಶಾಸಕರಾಗಿದ್ದರೂ ಇಲ್ಲಿ ಒಂದು ಉತ್ತಮ ಬಸ್ ನಿಲ್ದಾಣ, ಆಸ್ಪತ್ರೆ ಇಲ್ಲ. ಶಾಲಾ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ

ಸಂಡೂರು: ಈ.ತುಕಾರಾಂ ಅವರು ನಾಲ್ಕು ಬಾರಿ ಶಾಸಕರಾಗಿದ್ದರೂ ಸಂಡೂರು ಕ್ಷೇತ್ರ ಅಭಿವೃದ್ಧಿಯಾಗಿಲ್ಲ. ಉಪ ಚುನಾವಣೆ ಸಂಡೂರಿನ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಾಗಿದೆ. ಹೀಗಾಗಿ ಕ್ಷೇತ್ರದ ಜನತೆ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಭಾನುವಾರ ಸಂಜೆ ರೋಡ್ ಶೋ ನಡೆಸಿ, ವಿವಿಧೆಡೆ ಮತದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ.ತುಕಾರಾಂ ನಾಲ್ಕು ಬಾರಿ ಶಾಸಕರಾಗಿದ್ದರೂ ಇಲ್ಲಿ ಒಂದು ಉತ್ತಮ ಬಸ್ ನಿಲ್ದಾಣ, ಆಸ್ಪತ್ರೆ ಇಲ್ಲ. ಶಾಲಾ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ. ಯಡಿಯೂರಪ್ಪ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆ, ಬಾಲಕಿಯರಿಗೆ ಸೈಕಲ್ ವಿತರಿಸುವ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸರ್ಕಾರ ನಿಲ್ಲಿಸಿದೆ. ಒಳ್ಳೆಯ ಕಾರ್ಯಕ್ಕೆ ಮಣ್ಣು ಹಾಕುವುದೇ ಇವರ ಕಾರ್ಯವಾಗಿದೆ. ಮಹರ್ಷಿ ವಾಲ್ಮೀಕಿ ಜಯಂತಿಗೆ ರಜೆ ಘೋಷಣೆ ಮಾಡಿದ್ದು ಯಡಿಯೂರಪ್ಪ ಹಾಗೂ ಶ್ರೀರಾಮುಲು ಎಂದರು.

ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಕ್ಷೇತ್ರದ ಜನತೆ ಬಂಗಾರು ಹನುಮಂತು ಅವರನ್ನು ಗೆಲ್ಲಿಸಿದಲ್ಲಿ, ಗಂಗಾವತಿ ಮಾದರಿಯಲ್ಲಿ ಕ್ಷೇತ್ರದಲ್ಲಿ ಮಾದರಿ ಹೆರಿಗೆ ಆಸ್ಪತ್ರೆಯನ್ನು ಆರಂಭಿಸಲಾಗುವುದು. ಶಿವಪುರ ಕೆರೆಯನ್ನು ಅಭಿವೃದ್ಧಿ ಪಡಿಸಿ, ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುವುದು. ವಾಡಾ ಮೂಲಕ ತಾಲೂಕಿನಲ್ಲಿ ಜೆಎಸ್‌ಡಬ್ಲು ನಂತಹ ೪-೫ ಕಾರ್ಖಾನೆಗಳನ್ನು ಆರಂಭಿಸಿ, ಇಲ್ಲಿನ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಇದಕ್ಕೆ ತಪ್ಪಿದಲ್ಲಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದರು.

ಮಾಜಿ ಸಂಸದ ಅನಿಲ್ ಲಾಡ್, ಅಭ್ಯರ್ಥಿ ಬಂಗಾರು ಹನುಮಂತು ಮಾತನಾಡಿ, ಅವಕಾಶ ಕಲ್ಪಿಸಿಕೊಡಿ. ಕ್ಷೇತ್ರವನ್ನು ಸರ್ವತೋಮುಖವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ದಿವಾಕರ್ ಅಭ್ಯರ್ಥಿ ಪರವಾಗಿ ಮತಯಾಚಿಸಿದರು. ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಪುರಸಭೆ ಸದಸ್ಯರಾದ ಅನಿತಾ ವಸಂತಕುಮಾರ್, ಹರೀಶ್, ಅಬ್ದುಲ್ ಮುನಾಫ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕ, ಉಪಾಧ್ಯಕ್ಷ ಜಿ.ಟಿ. ಪಂಪಾಪತಿ, ಸಂಡೂರು ಮಂಡಲ ಅಧ್ಯಕ್ಷ ನಾನಾ ಸಾಹೇಬ್ ನಿಕ್ಕಂ, ಮುಖಂಡ ಡಿ. ಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.