ಸಾರಾಂಶ
ಬಳ್ಳಾರಿ: ರಕ್ತವು ಅಮೂಲ್ಯವಾದದ್ದು. ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಕರೆ ನೀಡಿದರು.
ರಾಜ್ಯ ಏಡ್ಸ್ ಪ್ರಿವೆನ್ಷನ್, ರಾಜ್ಯ ರಕ್ತ ಚಾಲನಾ ಪರಿಷತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರಕ್ತ ಸುರಕ್ಷತ ಸಮಿತಿ, ಜಿಲ್ಲಾ ಏಡ್ಸ್ ನಿಯಂತ್ರಣ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ನಗರದ ಶ್ರೀಮತಿ ಸರಳದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಏರ್ಪಡಿಸಿದ್ದ ಜಾಥಾಗೆ ಚಾಲನೆ ನೀಡಿ ಅವರು ಅವರು ಮಾತನಾಡಿದರು.ಯಾವುದೇ ಸಮಯದಲ್ಲಿ ಇನ್ನೊಬ್ಬರ ಜೀವವನ್ನು ಉಳಿಸಲು 18 ವರ್ಷದ ಮೇಲ್ಪಟ್ಟ ಎಲ್ಲ ಆರೋಗ್ಯವಂತರು ತಪ್ಪದೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು.
ಬಳಿಕ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಎಚ್ಐವಿ ನಿಯಂತ್ರಣಾಧಿಕಾರಿಯಾದ ಡಾ.ಇಂದ್ರಾಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನನುಷ್ಯ ಆರೋಗ್ಯವಂತನಾಗಿರಲು ಶುದ್ಧ ರಕ್ತದ ಪರಿಚಲನೆ ಮುಖ್ಯವಾಗಿದೆ. ರಕ್ತದಾನ ಮಾಡುವುದರಿಂದ ಶುದ್ಧ ರಕ್ತ ಉತ್ಪತ್ತಿಯಾಗುತ್ತದೆ. ಹಾಗಾಗಿ ಅರ್ಹರು ತಪ್ಪದೇ ರಕ್ತದಾನ ಮಾಡಿ, ಇತರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.ಗರ್ಭಿಣಿಯರಿಗೆ, ಅಪಘಾತಕ್ಕೆ ಒಳಗಾದವರಗೆ, ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದವರಿಗೆ ಮತ್ತು ರೋಗಿಗಳಿಗೆ ರಕ್ತವು ಅತ್ಯವಶ್ಯವಾಗಿದ್ದು, ತಮ್ಮ ಅಮೂಲ್ಯವಾದ ರಕ್ತವನ್ನು ನೀಡುವುದರಿಂದ ಇತರರ ಜೀವ ಉಳಿಸಬಹುದು. ರಕ್ತದಾನ ಮಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ರಕ್ತದಾನ ಮಾಡುವುದರಿಂದ ರಕ್ತ ಮರು ಉತ್ಪತ್ತಿಯಾಗಿ, ಆರೋಗ್ಯ ಸುಧಾರಿಸಿಕೊಳ್ಳುತ್ತದೆ ಎಂದು ವಿವರಿಸಿದರು.
ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಮಂಜುನಾಥ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ಸುಭಾಷ್ ಸಿಂಗ್, ರಾಜೇಂದ್ರ ರೆಡ್ಡಿ, ಹೊನ್ನೂರಸಾಬ್, ದಾದಾಪೀರ್, ಸಂಪತಕುಮಾರ್, ರಾಘವೇಂದ್ರ, ಗೋಪಣ್ಣ ಮತ್ತು ರಾಮು ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾವು ಫಲಕ ಮತ್ತು ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು.ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ಕ್ರಾಸ್ ಸಂಯೋಜಕಿ ಡಾ.ಪಲ್ಲವಿ, ಜಿಲ್ಲಾ ಆಶ್ರಿತ ರೋಗವಾಹಕಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಎಚ್ ದಾಸಪ್ಪನವರ, ಗಿರೀಶ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.