ಸಾರಾಂಶ
ಹುಬ್ಬಳ್ಳಿ ತಾಲೂಕು ಆಡಳಿತಸೌಧದಲ್ಲಿ ತಾಪಂ ವತಿಯಿಂದ ಆಯೋಜಿಸಲಾಗಿದ್ದ ವಾಕ್ ಥಾನ್ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಮತದಾನ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹುಬ್ಬಳ್ಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಹೇಳಿದರು.ತಾಲೂಕು ಆಡಳಿತಸೌಧದಲ್ಲಿ ತಾಪಂ ವತಿಯಿಂದ ಆಯೋಜಿಸಲಾಗಿದ್ದ ವಾಕ್ ಥಾನ್ಗೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ತಮ್ಮ ಹಕ್ಕನ್ನು ಸರಿಯಾದ ವ್ಯಕ್ತಿಗೆ ಚಲಾಯಿಸುವ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. 18 ವರ್ಷ ಪೂರ್ಣಗೊಂಡವರು ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದುಕೊಳ್ಳಲಿದ್ದಾರೆ. ಹೀಗಾಗಿ, ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.ಇದೇ ಸಂದರ್ಭದಲ್ಲಿ ಚೆನ್ನಮ್ಮ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.
ತಾಲೂಕು ಆಡಳಿತಸೌಧದಿಂದ ಚೆನ್ನಮ್ಮ ವೃತ್ತದವರೆಗೆ ವಾಕ್ ಥಾನ್ ರ್ಯಾಲಿ ನಡೆಯಿತು. ರ್ಯಾಲಿಯುದ್ದಕ್ಕೂ ಮತದಾನದ ಕುರಿತ ಘೋಷಣೆ ಕೂಗಲಾಯಿತು.ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಡಾ. ಸಂಗಮೇಶ ಬಂಗಾರಿಮಠ, ಚಂದ್ರಶೇಖರ ಕುರ್ತಕೋಟಿ, ಶಿವಾನಂದ ನಸಬಿ, ತಾಲೂಕು ಎಂ.ಆರ್. ಡಬ್ಲೂ ಮಹಾಂತೇಶ ಕುರ್ತಕೋಟಿ, ರಮೇಶ ಲಮಾಣಿ ಸೇರಿದಂತೆ ತಾಪಂ ಸಿಬ್ಬಂದಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಇತರರು ಭಾಗವಹಿಸಿದ್ದರು.