ಹಾವೇರಿ: ಮಾನವ ಕಳ್ಳ ಸಾಗಾಣಿಕೆ ಸಮಾಜದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದನ್ನು ತಡೆಗಟ್ಟಲು ಎಲ್ಲರ ಸಹಕಾರ ಅತೀ ಮುಖ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಅವರು ಹೇಳಿದರು.
ನಗರದ ಜೆ.ಪಿ. ರೋಟರಿ ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮನುಷ್ಯನ ಆಸೆಗೆ ಮಿತಿಯಿಲ್ಲ, ಮನುಷ್ಯ ತಾನು ಸುಖವಾಗಿರಲು ಎಲ್ಲ ಪಾಪ ಕೃತ್ಯಗಳನ್ನು ಮಾಡಲು ಹಿಂಜರಿಯುವುದಿಲ್ಲ. ಸಮಾಜದಲ್ಲಿ ಹಿಂದಿನಿಂದಲೂ ಸಣ್ಣ ಮಕ್ಕಳಿಂದ ಹಿಡಿದು ವಯಸ್ಕ ಹೆಣ್ಣು ಮಕ್ಕಳು ಹಾಗೂ ಗಂಡು ಮಕ್ಕಳು ಹಾಗೂ ವೃದ್ಧರು ಆಮಿಷಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಹಾಗಾಗಿ ಮಾನವ ಕಳ್ಳ ಸಾಗಾಣಿಕೆ ತಡೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಮೂಲಕ ಅಂತಹ ಕೃತ್ಯಗಳನ್ನು ತಡೆಯಲು ಮುಂದಾಗಬೇಕು. ಕಾನೂನು ನೆರವಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಬಹುದು ಎಂದು ಹೇಳಿದರು.
ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್. ಡಿಳ್ಳೆಪ್ಪನವರ ಅವರು ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಹಾಗೂ ಮುಖ್ಯೋಪಾಧ್ಯಾಯ ಸಿ.ವೈ.ದಳವಾಯಿ ಅವರು ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಕುರಿತು ಉಪನ್ಯಾಸ ನೀಡಿದರು.ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲ ವಿ.ಜಿ. ದೊಡ್ಡಗೌಡರ ಅವರು ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.