ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಬೆಂಗಳೂರಿನ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿಯಾಗಿ ಆಶೀರ್ವಾದ ಪಡೆದರು.
ಹಿರೇಕೆರೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಬೆಂಗಳೂರಿನ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿಯಾಗಿ ಆಶೀರ್ವಾದ ಪಡೆದರು.
ಭೇಟಿಯ ವೇಳೆ ದೇವೇಗೌಡರು ಬಿ.ಸಿ. ಪಾಟೀಲ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಹಿಂದಿನ ರಾಜಕೀಯ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ''''ನಾನೇ ಖುದ್ದಾಗಿ ನಿಮ್ಮನ್ನು ಹಿಂದೆ ಜೆಡಿಎಸ್ ಪಕ್ಷಕ್ಕೆ ಕರೆದುಕೊಂಡು ಬಂದಿದ್ದೆ'''' ಎಂದು ಸ್ಮರಿಸಿಕೊಂಡು, ರಾಜಕೀಯ ಜೀವನದ ಹಲವು ಅನುಭವಗಳನ್ನು ಹಂಚಿಕೊಂಡರು. ಇದೇ ವೇಳೆ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ದೇವೇಗೌಡರು, ಕಾಂಗ್ರೆಸ್ ಸರ್ಕಾರದ ಆಡಳಿತ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲು ತಾವು ಇನ್ನೂ ಸಕ್ರಿಯವಾಗಿರುವುದಾಗಿ ಮಾರ್ಮಿಕವಾಗಿ ಹೇಳಿದರು. ದೇವೇಗೌಡರೊಂದಿಗಿನ ಈ ಆತ್ಮೀಯ ಭೇಟಿ ಹಾಗೂ ಅವರ ಮಾರ್ಗದರ್ಶನ ಮತ್ತು ಆಶೀರ್ವಾದವು ಮುಂದಿನ ರಾಜಕೀಯ ಹಾದಿಯಲ್ಲಿ ಹಾಗೂ ಕ್ಷೇತ್ರದ ಕಾರ್ಯಕರ್ತರೊಂದಿಗೆ ಮತ್ತಷ್ಟು ಕೆಲಸ ಮಾಡಲು ಬಲ ನೀಡಿದೆ ಎಂದು ಬಿ.ಸಿ.ಪಾಟೀಲ ತಿಳಿಸಿದ್ದಾರೆ.