ಕನ್ನಡಪ್ರಭ ವಾರ್ತೆ ಅಥಣಿ
ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ತಯಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಹಸೀಲ್ದಾರ್ ಸಿದರಾಯ ಬೋಸಗಿ ಸೂಚಿಸಿದರು.ಸೋಮವಾರ ಇಲ್ಲಿನ ನಂ.1ರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶ್ರೀ ಮೌನಯೋಗಿ ಮರುಳು ಶಂಕರ ದೇವರ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿಯಿಂದ ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದರು. ಅಥಣಿ ತಾಲೂಕಿನ ಶೈಕ್ಷಣಿಕ ವಲಯದಲ್ಲಿ 21 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಈ ಬಾರಿ ಫಲಿತಾಂಶ ಉತ್ತಮಪಡಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೇ, ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ನಿರ್ಮಿಸಬೇಕು. ಪಾರದರ್ಶಕ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲು ಸಲಹೆ ನೀಡಿದರು.ನಿಷೇಧಾಜ್ಞೆ:
ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ನಕಲು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷೆ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ಹೆಸ್ಕಾಂ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಸಮಸ್ಯೆಯಾಗದಂತೆ ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು, ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸೂಚನೆ ನೀಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.ಇನ್ನು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜೆ ಮಾತನಾಡಿ, ಅಥಣಿ ತಾಲೂಕಿನ ಒಟ್ಟು 5690 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಎರಡು ಹಂತಗಳಲ್ಲಿ ಮೇಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಸುತ್ತಲೂ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಸೇರಿದಂತೆ ಇನ್ನಿತರ ವ್ಯವಸ್ಥೆ ಗಳ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕು. ಈ ಬಾರಿ ಯಾವುದೇ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ ಎಂದು ಹೇಳಿದರು.ಸಭೆಯಲ್ಲಿ ತಾಪಂ ಅಧಿಕಾರಿ ಶಿವಾನಂದ ಕಲ್ಲಾಪುರ, ಸಿಪಿಐ ಸಂತೋಷ ಹಳ್ಳೂರು, ಸಾರಿಗೆ ಇಲಾಖೆ ವ್ಯವಸ್ಥಾಪಕ ಎನ್.ಎಂ.ಕೇರಿ, ಆರೋಗ್ಯ ಇಲಾಖೆಯ ಶಿಕ್ಷಣ ಅಧಿಕಾರಿ ಎ.ಬಿ.ಗೂಳಿಧರ, ಬಿಸಿಯೂಟ ನಿರ್ದೇಶಕ ಎಂ.ವ್ಹಿ.ನಾಮದಾರ, ಕ್ಷೇತ್ರ ಸಮನ್ವಯಾಧಿಕಾರಿ ಗೌಡಪ್ಪ ಖೋತ, ಶಿಕ್ಷಣ ಸಂಯೋಜಕ ಎಚ್.ವೈ.ಗಸ್ತಿ ಸೇರಿ ಇತರರು ಇದ್ದರು.